ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಗರದಲ್ಲಿ ಇತ್ತೀಚೆಗೆ ನಡೆಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನ ಆಚರಣೆ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಭಾರತ ದೇಶದ ಜನಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ದೇಶವು ಚೀನಾ ದೇಶದ ಜನಸಂಖ್ಯೆಯನ್ನು ಮೀರಿ ಮೊದಲ ಸ್ಥಾನದಲ್ಲಿದೆ. ಲಿಂಗ ಸಮಾನತೆ ಪ್ರಕಾರ ಒಂದು ಗಂಡಿಗೆ ಒಂದು ಹೆಣ್ಣು ಇರುವಂತೆ ಲಿಂಗಾನುಪಾತವನ್ನು ಕಾಪಾಡಿಕೊಳ್ಳಬೇಕಿದೆ. ಈ ಬಗ್ಗೆ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಮುಖಾಂತರ ಜಾಗೃತಿ ಮೂಡಿಸಬೇಕು ಎಂದರು.ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಂಕಪ್ಪ ಅವರು ಮಾತನಾಡಿ ಈ ವರ್ಷದ ಘೋಷಣೆ ಪ್ರಕಾರ ಆರೋಗ್ಯ ಇಲಾಖೆಯಿಂದ ಪ್ರತಿದಿನ ಜನರಿಗೆ ಕುಟುಂಬ ಯೋಜನೆ ಕುರಿತು ಜಾಗೃತಿ ಮೂಡಿಸಬೇಕು. ಪರಿಣಾಮಕಾರಿ ಜಾಗೃತಿ ಕಾರ್ಯಕ್ರಮಗಳಿಂದ ಜನಸಂಖ್ಯಾ ಸ್ಪೋಟವನ್ನು ತಡೆಗಟ್ಟಬಹುದು. ಕುಟುಂಬ ಯೋಜನೆ ವಿಧಾನಗಳನ್ನು ಅಳವಡಿಸಿಕೊಂಡು ಜನಸಂಖ್ಯಾ ಸ್ಥಿರತೆಯನ್ನು ಕಾಪಾಡಿಕೊಳ್ಳಬೇಕು. ಒಂದು ಮಗುವಿಗೂ ಇನ್ನೊಂದು ಮಗುವಿಗೂ ಅಂತರ ಕಾಪಾಡಿಕೊಳ್ಳುವುದು ಅತೀ ಮುಖ್ಯ ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ರವಿಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಶೇಖರ್, ಸರ್ವಲೆನ್ಸ್ ವೈದ್ಯಾಧಿಕಾರಿ ಡಾ. ಸುಧೀರ್ ನಾಯಕ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಡಾ. ಗೋಪಾಲ್, ಡಾ. ಗಿರಿದಾಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಜಿಲ್ಲಾ ನರ್ಸಿಂಗ್ ಅಧಿಕಾರಿ ಶಾಂತಮ್ಮ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.