ಚಾಮರಾಜನಗರ: ಪ್ರಕೃತಿ ವಿಪತ್ತುಗಳಿಂದಾಗುವ ಅನಾಹುತವನ್ನು ಪರಿಣಾಮಕಾರಿಯಾಗಿ ತಡೆಯಲು ಯುವಜನತೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಡಿ. ಎಸ್. ರಮೇಶ್ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಪತ್ತು ನಿರ್ವಹಣಾ ಕ್ಷಿಪ್ರ ತರಬೇತಿಯ ಕಾರ್ಯಾಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿ ವಿಕೋಪವು ಯಾವ ಸಂದರ್ಭದಲ್ಲಿ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಎಲ್ಲಾ ರೀತಿಯ ಮುನ್ನೆಚ್ಚರಿಕ ಕ್ರಮಗಳನ್ನು ವಹಿಸುವುದು ಸೂಕ್ತ. ಪ್ರಕೃತಿ ವಿಕೋಪದಲ್ಲಿ ಸಣ್ಣ ಸಣ್ಣ ವಿಚಾರಗಳು ಸಹ ದೊಡ್ಡ ರೀತಿಯ ತೊಂದರೆ ಉಂಟು ಮಾಡಬಹುದು. ಈ ರೀತಿಯ ಪರಿಸ್ಥಿತಿಯಿಂದ ಪಾರಾಗಲೂ ಎಲ್ಲರಿಗೂ ಜಾಗೃತಿ ಅತ್ಯಂತ ಅವಶ್ಯಕವಾಗಿದೆ ಎಂದರು.
ಜಿಲ್ಲೆಯಲ್ಲಿ ಪ್ರಕೃತಿ ನಿರ್ವಹಣಾ ಕ್ಷಿಪ್ರ ತರಬೇತಿ ಕಾರ್ಯಾಗಾರದ ಪ್ರಯೋಜನವನನು ಪಡೆಯಬೇಕು. ಪ್ರಕೃತಿ ವಿಕೋಪದಿಂದ ಹಾನಿಗಳು ಉಂಟಾದಾಗ ಮೊದಲು ಯಾವ ಹಂತದಲ್ಲಿ ಕಾರ್ಯ ನಿರ್ವಹಿಸಬೇಕು ಎಂಬ ವಿಷಯಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ ಪ್ರಕೃತಿ ವಿಕೋಪದಂತಹ ಸಮಸ್ಯೆಗಳಿಂದ ಪಾರಾಗಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಿ. ಎಸ್. ರಮೇಶ್ ಅವರು ತಿಳಿಸಿದರು.
ನಂತರ ವಿಪತ್ತು ಸಂದರ್ಭ, ಅಗ್ನಿ ಅನಾಹುತ, ವಿದ್ಯುತ್ಗೆ ಸಂಬಂಧಿಸಿದ ಅವಘಡ, ಎಲ್.ಪಿ.ಜಿ ಗ್ಯಾಸ್ ಸ್ಪೋಟ ಸಂದರ್ಭದಲ್ಲಿ ವಹಿಸಬೇಕಿರುವ ಕ್ರಮಗಳ ಬಗ್ಗೆ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಇಲಾಖೆಯ ಅಧಿಕಾರಿ ನವೀನ್ ಕುಮಾರ್ ಅವರು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು.
ವಿಪತ್ತು ನಿರ್ವಹಣೆಯಲ್ಲಿ ಬಳಸುವ ಸಲಕರಣೆಗಳು, ಅಗ್ನಿ ನಂದಿಸುವ ಅಣಕು ಕಾರ್ಯಾಚರಣೆ ಇನ್ನಿತರ ಚಟುವಟಿಕೆಗಳನ್ನು ನಡೆಸಲಾಯಿತು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಮಹೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ ಅವರು ಉಪಸ್ಥಿತರಿದ್ದರು.