ಕೆ.ಆರ್.ನಗರ: ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಸೌಜನ್ಯದಿಂದ ವರ್ತಿಸಿ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಕೆ. ಆರ್. ಮಹೇಂದ್ರಪ್ಪ ಹೇಳಿದರು. ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಡಾ. ನಾಗೇಂದ್ರ ಅವರಿಂದ ಅಧಿಕಾರ ಸ್ವೀಕರಿಸಿದ ನಂತರ ನಡೆದ ಆಸ್ಪತ್ರೆಯ ವೈದ್ಯರುಗಳ ಸಭೆಯಲ್ಲಿ ಮಾತನಾಡಿದ ಅವರು ಸಿಬ್ಬಂದಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ವೈದರೊಂದಿಗೆ ಉತ್ತಮ ಕೆಲಸ ಮಾಡಬೇಕೆಂದರು. ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುತ್ತಿಲ್ಲ ಎಂದು ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ಅವಕಾಶ ಮಾಡಿಕೊಡದೆ ಪ್ರಾಮಾಣಿಕವಾಗಿ ಜವಾಬ್ದಾರಿ ಅರಿತು ನಡೆದುಕೊಳ್ಳಬೇಕೆಂದರು.
ಆಸ್ಪತ್ರೆಯಲ್ಲಿ ಇರುವ ಸಿಬ್ಬಂದಿ ಕೊರತೆಯ ಬಗ್ಗೆ ಶಾಸಕರಾದ ಡಿ. ರವಿಶಂಕರ್ ಅವರಿಗೆ ಮನವಿ ಸಲ್ಲಿಸಿ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿಸಿಕೊಡುವಂತೆ ಕೋರಲಾಗುವುದು ಎಂದರಲ್ಲದೆ ಅವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ನಾನು ಕೆಲಸ ನಿರ್ವಹಿಸುತ್ತೇನೆ ಎಂದು ತಿಳಿಸಿದರು. ಶಾಸಕರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಿ ಆಸ್ಪತ್ರೆಯ ಆವರಣದಲ್ಲಿ ಇಂಟರ್ಲಾಕ್ ಅಳವಡಿಸಲು ಅವಕಾಶ ಕಲ್ಪಿಸಿ ಕೊಡಬೇಕೆಂದು ಕೋರುವುದರ ಜೊತೆಗೆ ವ್ಯವಸ್ಥಿತವಾಗಿ ವಿದ್ಯುತ್ ದೀಪದ ಅಳವಡಿಸಲಾಗುವುದು ಎಂದವರು ಮಾಹಿತಿ ನೀಡಿದರು. ವೈದ್ಯರು ಮತ್ತು ಸಿಬ್ಬಂದಿ ಆಸ್ಪತ್ರೆಗೆ ಬರುವ ರೋಗಿಗಳಿಂದ ಯಾವುದೇ ದೂರುಗಳು ಬರದಂತೆ ಕೆಲಸ ನಿರ್ವಹಿಸಿ ಉತ್ತಮ ಸೇವೆ ನೀಡಿ ಇತರರಿಗೆ ಮಾದರಿಯಾಗಿ ಕೆಲಸ ಮಾಡಬೇಕೆಂದು ಕೋರಿಕೊಂಡರು.
ಪುರಸಭೆ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್, ನಗರ ಯೋಜನಾ ಪ್ರಾಧಿಕಾರದ ಮಾಜಿ ನಿರ್ದೇಶಕ ಕೆ.ಎನ್.ಪ್ರಸನ್ನಕುಮಾರ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹದೇವ್, ಡಾ.ತೇಜಮಣಿ, ಡಾ.ನವೀನ್, ಡಾ.ಮಾಧವ್, ಡಾ . ಶಿವಶಂಕರ್, ಡಾ.ಪ್ರಹ್ಲಾದ್, ಡಾ.ಭವಾನಿ, ಡಾ.ದಿವ್ಯತ, .ಡಾ.ದರ್ಶನ್, ಡಾ.ಭಾನುಪ್ರಕಾಶ್, ನರ್ಸಿಂಗ್ ಸೂಪರಿಂಟೆಂಡೆಂಟ್ ಬೀನಾ ಕುಮಾರಿ ಮತ್ತಿತರರು ಇದ್ದರು.