ಬೆಂಗಳೂರು : ಕಾಂಗ್ರೆಸ್ ಪಕ್ಷ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದರು.
ಕಾರ್ಯಕರ್ತರು ನಿಮ್ಮ ಸ್ಪರ್ಧೆಗೆ ಹೆಚ್ಚಿನ ಒತ್ತಡ ಹಾಕುತ್ತಿದ್ದಾರೆ, ಚನ್ನಪಟ್ಟಣದಲ್ಲಿ ಗೆಲ್ಲುವ ವಿಶ್ವಾಸವಿದೆಯೇ ಎಂದು ಕೇಳಿದ ಪ್ರಶ್ನೆಗೆ, ನನ್ನ ಮುಕ್ತವಾದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ. ಅವರು ತೀರ್ಮಾನ ಮಾಡಿದ ನಂತರ ನಾನು ತೀರ್ಮಾನ ಮಾಡುತ್ತೇನೆ. ಪಕ್ಷದ ಆದೇಶವನ್ನು ನಾನು ಪಾಲಿಸಬೇಕು, ನಮ್ಮ ಮುಖಂಡರೂ ಪಾಲಿಸಬೇಕು ಎಂದರು.
ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಚರ್ಚೆಯ ಬಗ್ಗೆ ಕೇಳಿದಾಗ, ಯೋಗೇಶ್ವರ್ ಅವರು ಪರಿಷತ್ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು ಹಾಗೂ ಅದು ಅಂಗೀಕಾರವಾಗಿರುವ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದಿದ್ದೇನೆ. ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಚನ್ನಪಟ್ಟಣದಲ್ಲಿ ಇಂದು ಸಭೆ ಮಾಡುತ್ತಿರುವುದು ಗೊತ್ತಿದೆ. ಇದರ ಹೊರತಾಗಿ ಅವರು ಕಾಂಗ್ರೆಸ್ ಸೇರುವ ಕುರಿತು ಯಾವುದೇ ವಿಚಾರ ಗೊತ್ತಿಲ್ಲ ಎಂದು ತಿಳಿಸಿದರು. ಸೋಮವಾರ ರಾತ್ರಿ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎಂದು ಕೇಳಿದಾಗ, ನಮ್ಮ ಪಕ್ಷದ ಮುಂದಿನ ನಡೆ ಹೇಗಿರಬೇಕು ಎಂದು ಜಿಲ್ಲೆ ಶಾಸಕರು ಹಾಗೂ ಮುಖಂಡರ ಜತೆ ನಾವು ಚರ್ಚೆ ಮಾಡಿದ್ದು, ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದ್ದು, ಪಕ್ಷದಿಂದಲೇ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.