ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಬುಧವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 842.72 ಲೀಟರ್ (ರೂ.3,52,411 ಮೌಲ್ಯ) ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 705.01 ಲೀಟರ್ (ರೂ.291381 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 137.71 ಲೀಟರ್ (ರೂ.61030 ಮೌಲ್ಯ) ಮದ್ಯ ಮತ್ತು ಒಂದು ವಾಹನ (ರೂ.40 ಸಾವಿರ ಮೌಲ್ಯ) ವಶಪಡಿಸಿಕೊಳ್ಳಲಾಗಿದ್ದು, ಈವರೆಗೆ ಒಟ್ಟು 53 ಪ್ರಕರಣ ದಾಖಲಿಸಲಾಗಿದೆ.
ಮಾಹಿತಿ ತಂತ್ರಜ್ಞಾನ ಅಧಿಕಾರಿಗಳ ಮಾಹಿತಿ ಮೇರೆಗೆ ಸೂಕ್ತ ದಾಖಲೆ ಇಲ್ಲದ 20112 ಕೆಜಿ ಕೀಟನಾಶಕಗಳನ್ನು (ರೂ.26,13,554 ಮೌಲ್ಯದ) ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಾದ್ಯಂತ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ 24 ಎಸ್ಎಸ್ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.