ಬೆಂಗಳೂರು : ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರಿಂದು ರಾಜ್ಯಸಭೆಯಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಎತ್ತಿನಹೊಳೆ ಯೋಜನೆಯನ್ನು ಪ್ರಸ್ತಾಪಿಸಿದರು.
ಬಜೆಟ್ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದೆ ಎಂದು ಕಿಡಿಕಾರಿದರು.
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ದಾಳಿಗೆ ಪ್ರತಿ ದಿನ ಜನರು ಬಲಿಯಾಗುತ್ತಿದ್ದಾರೆ. ರೈತರು ಅಪಾರ ಪ್ರಮಾಣದ ಬೆಳೆ ನಷ್ಟ ಅನುಭವಿಸುತ್ತಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಬಗ್ಗೆಯೂ ತೀವ್ರ ಕಳವಳ ವ್ಯಕ್ತಪಡಿಸಿದರು.
ಇನ್ನೂ ಬೆಂಗಳೂರಿನ ಕೊಳಚೆ ನೀರನ್ನು 3 ಹಂತಗಳಲ್ಲಿ ಶುದ್ಧೀಕರಿಸದೆ, ಚಿಕ್ಕಬಳ್ಳಾಪುರ , ಕೋಲಾರ ಜಿಲ್ಲೆಗಳಿಗೆ ಹರಿಸುತ್ತಿದೆ. ಇದರ ಪರಿಣಾಮ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿಯಾಗುತ್ತಿದ್ದು, ಜನರ ಜೀವದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂಬುದನ್ನು ಸದನಕ್ಕೆ ಮನವರಿಕೆ ಮಾಡಿಕೊಟ್ಟರು.



