ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ (ಶುಕ್ರವಾರ) ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಹೈವೋಲ್ಟೇಜ್ ಉಪಚುನಾವಣೆಗಳ ನಡುವೆ ನಡೆಯುತ್ತಿರುವ ಈ ಭೇಟಿಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ, ಸಂಚಲನವನ್ನು ಮೂಡಿಸಿದೆ.
ಇನ್ನೂ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿರುವ ಗೃಹಸಚಿವ ಅಮಿತ್ ಶಾ ಅವರು, ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಗರೂರಿಗೆ ತೆರಳಲಿದ್ದಾರೆ. ಅಲ್ಲಿನ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾಗಿರುವ ವಿಶೇಷ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ.
ಬಿಜಿಎಸ್ ಕಾಲೇಜಿನಲ್ಲಿ ಎಎಸ್ಎಲ್ ಸಭೆ : ಬಿಜಿಎಸ್ ಮೆಡಿಕಲ್ ಕಾಲೇಜು ಆವರಣದಲ್ಲಿರುವ ಎಂಇಯು ಕಾನ್ಫರೆನ್ಸ್ ಸಭಾಂಗಣದಲ್ಲಿ ಶುಕ್ರವಾರದಂದು ಮಹತ್ವದ ಎಎಸ್ಎಲ್ (ASL) ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಕೇಂದ್ರ ಸಚಿವರು ಭಾಗವಹಿಸಿ ಚರ್ಚೆ ನಡೆಸಲಿದ್ದು, ಇದಕ್ಕೆ ಬೇಕಾದ ಎಲ್ಲಾ ಪೂರ್ವಸಿದ್ಧತೆಗಳನ್ನು ಕಾಲೇಜು ಆಡಳಿತ ಮಂಡಳಿ ಮತ್ತು ಸ್ಥಳೀಯ ಆಡಳಿತ ಕೈಗೊಂಡಿದ್ದು, ಕೇಂದ್ರದ ಪ್ರಭಾವಿ ನಾಯಕರ ಭೇಟಿಯ ಹಿನ್ನೆಲೆಯಲ್ಲಿ ನೆಲಮಂಗಲ ಮತ್ತು ನಗರೂರು ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಉಪಚುನಾವಣೆಯ ಸಂದರ್ಭದಲ್ಲೇ ಅಮಿತ್ ಶಾ ಅವರು ರಾಜ್ಯಕ್ಕೆ ಬರುತ್ತಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವ ಸಾಧ್ಯತೆಯಿದೆ.



