ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಚ್ಚಾಟದಿಂದ ರಾಜ್ಯದ ಆರ್ಥಿಕತೆ ದಿವಾಳಿಯತ್ತ ಸಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದರು.
ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಖುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಶಿವಕುಮಾರ್ ಅವರು ಸಿಎಂ ಖುರ್ಚಿಗೆ ಹೇಗೆ ಏರಲಿ ಎನ್ನುವ ಚಿಂತೆಯಲ್ಲಿದ್ದಾರೆ. ಇಬ್ಬರ ಕಚ್ಚಾಟದಿಂದ ರಾಜ್ಯದಲ್ಲಿ ಅಭಿವೃಧಿ ಕೆಲಸ ಆಗುತ್ತಿಲ್ಲ. ಹೀಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ. ಜನ ಕಾಂಗ್ರೆಸ್ ಆಡಳಿತದಿಂದ ಬೇಸತ್ತಿದ್ದಾರೆ ಎಂದರು.
ಇನ್ನು ಸಚಿವ ಪ್ರಿಯಾಂಕ್ ಖರ್ಗೆ ನರೇಂದ್ರ ಮೋದಿ, ಆರ್ಎಸ್ಎಸ್ ಗೆ ಬಯ್ಯುವುದನ್ನೇ ದೊಡ್ಡ ಸಾಧನೆ ಎನ್ನುವ ಭ್ರಮೆಯಲ್ಲಿದ್ದಾರೆ. ಅದರಿಂದ ಯಶಸ್ಸು ಸಿಗುವುದಿಲ್ಲ. ತಮ್ಮ ವ್ಯಕ್ತಿತ್ವವನ್ನ ಒಳ್ಳೆಯ ರೀತಿಯಲ್ಲಿ ಬೆಳೆಸಿಕೊಳ್ಳಲಿ. ಪ್ರಿಯಾಂಕ್ ಮೂರು ವರ್ಷದಲ್ಲಿ ಏನ್ ಸಾಧನೆ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ, ಐಟಿಬಿಟಿ ಇಲಾಖೆಯಲ್ಲಿ ಏನ್ ಸಾಧನೆ ಮಾಡಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.
ಬರೀ ವಿವಾದದ ಮಾತುಗಳನ್ನ ಆಡಬೇಡಿ. ನಿಮ್ಮ ಜಿಲ್ಲೆಯಲ್ಲೇ ಕುಡಿಯುವುದಕ್ಕೆ ನೀರಿಲ್ಲ, ರಸ್ತೆಗಳು ಹಾಳಾಗಿ ಹೋಗಿವೆ. ಗ್ರಾಮೀಣಾಭಿವೃದ್ದಿ ಸಚಿವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.
ಇರಾನ್ ಇಸ್ರೇಲ್ ಯುದ್ಧದಿಂದ ಸಮಸ್ಯೆ ಉಂಟಾಗಿದ್ದು, ಕೊರೊನಾ ರೀತಿಯಲ್ಲಿ ಈ ಸನ್ನಿವೇಶವನ್ನು ಎದುರಿಸಬೇಕಿದ್ದು, ನಮ್ಮ ಕೇಂದ್ರ ಸರ್ಕಾರದ ದೂರದೃಷ್ಟಿಯಿಂದ ನೆಮ್ಮದಿಯಿಂದ ಇದ್ದೇವೆ. ಪಕ್ಕದ ಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳುವುದು ಬೇಡ. ಯುದ್ಧದ ಸನ್ನಿವೇಶ ಇಟ್ಟುಕೊಂಡು ರಾಜಕಾರಣ ಮಾಡುವುದು ಬೇಡ ಎಂದರು. ಪೆಟ್ರೋಲ್ ಡೀಸೆಲ್ ಸಮಸ್ಯೆ ಇರುವುದು ನಿಜ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿಯೂ ಇದೆ ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ, ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ, ಪಕ್ಷದ ಮುಖಂಡರಾದ ದಯಾಘನ ಧಾರವಾಡಕರ್, ಅಂಬಾರಾಯ ಅಷ್ಠಗಿ ಸುದ್ದಿಗೋಷ್ಠಿಯಲ್ಲಿದ್ದರು.



