ಕೆ.ಆರ್.ನಗರ : ಕಳೆದ ಎರಡು ದಶಕಗಳಿಂದ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿರುವ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ತಿಮ್ಮಶೆಟ್ಟಿ ಅವರು ಹಲವು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗುವ ಮೂಲಕ ಜನಪರ ಸೇವೆಯಲ್ಲಿ ತೊಡಗಿದ್ದಾರೆ ಎಂದು ಸಾಮರಸ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರ ಸಂಘದ ಅಧ್ಯಕ್ಷ ಸೈಯದ್ ರಿಜ್ವಾನ್ ಹೇಳಿದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಮತ್ತು ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠ ಶಿಕ್ಷಣ ಮಹಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಡೆದ ಜಾನಪದ ಪರಿಷತ್ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪಡೆದಿರುವ ಅವರು ಅಭಿನಂದಿಸಲ್ಪಟ್ಟ ಹಿನ್ನೆಲೆಯಲ್ಲಿ ಸ್ನೇಹಿತರು ಮತ್ತು ಹಿತೈಷಿಗಳು ಹಮ್ಮಿಕೊಂಡಿದ್ದ ಸರಳ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ರಾಷ್ಟ್ರೀಯ ಮತ್ತು ನಾಡ ಹಬ್ಬಗಳು, ಸೇರಿದಂತೆ ಕನ್ನಡ ಪರ ಕಾರ್ಯಕ್ರಮಗಳು ಸೇರಿದಂತೆ ಇತರೆ ಎಲ್ಲಾ ಸಭೆ ಸಮಾರಂಭಗಳಿಗೆ ತಪ್ಪದೆ ಹಾಜರಾಗಿ ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡುವ ಮೂಲಕ ನಿರಂತರ ಸಹಕಾರ ನೀಡುತ್ತಿರುವ ಇವರು ನೂರ್ಕಾಲ ಬಾಳಲಿ ಎಂದು ಹಾರೈಸಿದರು.
ತಾಲೂಕು ಜಾನಪದ ಪರಿಷತ್ ಗೌರವಾಧ್ಯಕ್ಷ ಡಾ. ಎಂ.ಕೆ.ದೇವೇಂದ್ರಕುಮಾರ್, ಖಜಾಂಚಿ ರಾಜಯ್ಯ, ಸಹಕಾರ್ಯದರ್ಶಿ ವ್ಯಾನ್ ಸುರೇಶ್ ಇದ್ದರು.



