ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ನಾಗಮಲೆ ಪಾದಯಾತ್ರೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಜಿಲ್ಲಾಡಳಿತ ಸೂಚನೆ ಮೇರೆಗೆ ನಾಗಮಲೆ ಪಾದಯಾತ್ರೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ, ಈಗಾಲೇ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದ್ದು, ಚಿರತೆ ಸೆರೆ ಹಿಡಿಯುವ ತನಕ ನಾಗಮಲೆ ಪಾದಯಾತ್ರೆಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಯಾಗಿದ್ದನು. ಬೆಂಗಳೂರು ನಿವಾಸಿ ಸುರೇಶ್ ಅವರ ಪುತ್ರ ಹರ್ಷಿತ್ (10) ಮೃತನಾಗಿದ್ದನು. ಕುಟುಂಬದ ಜತೆ ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪೂಜೆಗೆ ಭಾನುವಾರ ಬೆಳಗ್ಗೆ ಸುಮಾರು 6 ಗಂಟೆಗೆ ನಾಗಮಲೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ಇಂಡಿಗನತ್ತ ಅರಣ್ಯ ಪ್ರದೇಶದ ಬಳಿ ಏಕಾಏಕಿ ಬಂದ ಚಿರತೆ, ಬಾಲಕ ಹರ್ಷಿತ್ ಮೇಲೆ ದಾಳಿ ನಡೆಸಿ ಕುಟುಂಬದವರ ಮುಂದೆಯೇ ಅರಣ್ಯದೊಳಗೆ ಎಳೆದೊಯ್ದಿತ್ತು. ಘಟನೆಯಿಂದ ಕುಟುಂಬದವರು ಬೆಚ್ಚಿಬಿದ್ದಿದ್ದು, ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ ವೇಳೆ ಅರಣ್ಯ ಪ್ರದೇಶದಲ್ಲಿ ಬಾಲಕನ ಶವ ಪತ್ತೆಯಾಗಿತ್ತು.



