ಬೆಂಗಳೂರು : ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಲು ಆರಂಭಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ಆಯ್ಕೆಮಾಡಿದ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಟೀಕಿಸಿದ್ದು, ಇದೇ ರೀತಿಯ ಮನವಿಯನ್ನು ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಮಾಡಿದ್ದವು ಎಂದು ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “1967ರಲ್ಲಿ ಇಂದಿರಾಗಾಂಧಿ ಭಾರತೀಯರು ಚಿನ್ನ ಖರೀದಿಸುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದಾಗ ಅದನ್ನು ‘ರಾಷ್ಟ್ರೀಯ ಶಿಸ್ತು’ ಎಂದು ಕರೆಯಲಾಗಿತ್ತು. 2013ರಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಾಂಬರಂ ಜನರಿಗೆ ಚಿನ್ನ ಖರೀದಿಸಬೇಡಿ ಎಂದು ಮನವಿ ಮಾಡಿದಾಗ ಅದನ್ನು ‘ಆರ್ಥಿಕ ಜವಾಬ್ದಾರಿ’ ಎಂದು ಪ್ರಶಂಸಿಸಲಾಗಿತ್ತು,” ಎಂದು ಉಲ್ಲೇಖಿಸಿದ್ದಾರೆ.
ಆದರೆ ಈಗ ಪ್ರಧಾನಿ ಮೋದಿ ಇದೇ ರೀತಿಯ ಆರ್ಥಿಕ ಶಿಸ್ತಿನ ಕರೆ ನೀಡುತ್ತಿದ್ದಂತೆ ಕಾಂಗ್ರೆಸ್ ನಾಯಕರು ಅದನ್ನು ವಿಚಿತ್ರ ಬೆಳವಣಿಗೆಯಂತೆ ಬಿಂಬಿಸುತ್ತಿದ್ದಾರೆ ಎಂದು ಅಶೋಕ್ ಟೀಕಿಸಿದ್ದಾರೆ.
ಭಾರತದ ವಿದೇಶಿ ವಿನಿಮಯ ಸಂಗ್ರಹ ಉಳಿಸುವುದು ಹಾಗೂ ರೂಪಾಯಿ ಮೌಲ್ಯ ಬಲಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಇದನ್ನು ರಾಜಕೀಯವಾಗಿ ಟೀಕಿಸುತ್ತಿರುವುದು ವಿಪರ್ಯಾಸ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಆಕ್ರೋಶ ವ್ಯಕ್ತಪಡಿಸುವ ಮೊದಲು ಕಾಂಗ್ರೆಸ್ ನಾಯಕರು ತಮ್ಮದೇ ಪಕ್ಷದ ಹಳೆಯ ಹೇಳಿಕೆಗಳನ್ನು ಒಮ್ಮೆ ಪರಿಶೀಲಿಸಬೇಕು ಎಂದು ಆರ್.ಅಶೋಕ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.



