ಬೆಂಗಳೂರು : ರಾಜ್ಯ ಸರ್ಕಾರ ಯಾವುದೇ ಬೇಡಿಕೆ ಇಲ್ಲದಿದ್ದರೂ ಕೂಡ ಅತ್ಯಂತ ಶಾಂತಿ ಸುವ್ಯವಸ್ಥೆಯಿಂದ ಶಿಕ್ಷಣ ವ್ಯವಸ್ಥೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿರುವುದು ವಿದ್ಯಾರ್ಥಿಗಳಲ್ಲಿ ಬೇಧ ಭಾವ ಮೂಡಿಸಲು ಅವಕಾಶ ನೀಡಿದಂತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನೂ ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ವಿಭಜನೆ ಹುಟ್ಟಿಸುವ ಈ ಕ್ರಮವು ತುಷ್ಟೀಕರಣದ ರಾಜಕೀಯಕ್ಕಾಗಿ ಕೈಗೊಂಡ ನಿರ್ಧಾರವಾಗಿದ್ದು, ಇದನ್ನು ಹಿಂಪಡೆಯದಿದ್ದರೆ ವಿದ್ಯಾರ್ಥಿಗಳಲ್ಲಿ ಉಂಟಾಗುವ ಆತಂಕ ಹಾಗೂ ಬೇಧಭಾವಕ್ಕೆ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಅಲ್ಲದೆ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 1980ರ ಶಾಲಾ ಸಮವಸ್ತ್ರ ಕಾನೂನಿನ ಅಡಿಯಲ್ಲಿ ಈ ಹಿಂದೆಯೇ ಸ್ಪಷ್ಟೀಕರಣ ನೀಡಲಾಗಿತ್ತು ಮತ್ತು ಅದನ್ನು ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು ಎಂದಿದ್ದಾರೆ. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿರುವಾಗಲೇ ಸರ್ಕಾರ ಈ ರೀತಿಯ ಆದೇಶ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸಿದೆ. ಶಿಕ್ಷಕರ ಕೊರತೆ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳಿದ್ದರೂ ಅವುಗಳನ್ನು ಪರಿಹರಿಸುವ ಬದಲು ಇಂತಹ ವಿವಾದಾತ್ಮಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹಿಜಾಬ್ ವಿಚಾರವನ್ನು ಅಂತಾರಾಷ್ಟ್ರೀಯ ಉದಾಹರಣೆಗಳೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹೇಳಿರುವ ಅವರು, ರಾಜ್ಯ ಸರ್ಕಾರದ ಈ ಕ್ರಮ ಜವಾಬ್ದಾರಿಯುತ ನಿರ್ಧಾರವಲ್ಲ, ಸಂಪೂರ್ಣ ಬೇಜವಾಬ್ದಾರಿ ನಡೆ ಎಂದು ಹೇಳಿದ್ದಾರೆ.
ಕಾನೂನಿನ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲೇ ಇಂತಹ ಆದೇಶ ಹೊರಡಿಸಿರುವುದು ರಾಜ್ಯದಲ್ಲಿ ಅನಗತ್ಯ ವಿವಾದವನ್ನು ಹುಟ್ಟುಹಾಕಿದೆ ಎಂದು ಆರೋಪಿಸಿದ್ದಾರೆ.



