ಚಾಮರಾಜನಗರ : ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ನೀಡುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು, ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ಅವರಿಗೆ ನೀಡಲಾಗಿದೆ.
ಋಗ್ವೇದಿಯವರು ಕಳೆದ ಮೂರು ದಶಕಗಳ ನಿರಂತರ ಸೇವೆಯನ್ನು ಪರಿಗಣಿಸಿ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಟನೆಯ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಚ್ ಎಲ್ ಎನ್ ರಾವ್ ತಿಳಿಸಿದ್ದಾರೆ.
ಕಳೆದ 51 ವರ್ಷಗಳಿಂದ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ನೀಡಲ್ಪಡುತ್ತಿರುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಈ ಬಾರಿ ಋಗ್ವೇದಿಯವರಿಗೆ ಸಂದಿದೆ.
3000ಕ್ಕೂ ಹೆಚ್ಚು ವಿವಿಧ ರಾಷ್ಟ್ರೀಯ ಮತ್ತು ರಾಜ್ಯದ ವಿವಿಧ ಕಾರ್ಯಕ್ರಮಗಳು, ರಾಷ್ಟ್ರೀಯತೆ, ಆಧ್ಯಾತ್ಮಿಕ, ಸಂಸ್ಕೃತಿ, ಪರಂಪರೆಯ ಕಾರ್ಯಕ್ರಮಗಳನ್ನು ಕಳೆದ 34 ವರ್ಷಗಳಿಂದ ನಿರಂತರವಾಗಿ ನೆರವೇರಿಸಿಕೊಂಡು ಬರುತ್ತಿರುವ ಋಗ್ವೇದಿ ಉಪನ್ಯಾಸಕರಾಗಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಜೊತೆಗೆ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷ, ಪದಾಧಿಕಾರಿಗಳಾಗಿ, ಕಾರ್ಯಕರ್ತರಾಗಿ ಸೇವೆಯನ್ನು ಸಲ್ಲಿಸುವ ಮೂಲಕ ಸಾಂಸ್ಕೃತಿಕ ಚಿಂತಕರಾಗಿ ಗಡಿನಾಡಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಜೈ ಹಿಂದ್ ಪ್ರತಿಷ್ಠಾನ ಋಗ್ವೇದಿ ಯೂತ್ ಕ್ಲಬ್,ಜಿಲ್ಲಾ ಗಮಕ ಕಲಾ ಪರಿಷತ್ತು,ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು, ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಋಗ್ವೇದಿಯವರಿಗೆ ಆರ್ಯಭಟ ಪ್ರಶಸ್ತಿ ನೀಡಿರುವ ಸುಸಂದರ್ಭದಲ್ಲಿ ಅನೇಕ ಸಂಘ ಸಂಸ್ಥೆಗಳು ಅಭಿನಂದನೆ ಸಲ್ಲಿಸಿವೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 23ರ ಶನಿವಾರ ಸಂಜೆ 4 ಗಂಟೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ರಾಜೇಂದ್ರ ಬಾದಾಮಿಕರ್ ಉದ್ಘಾಟನೆ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾನ್ ನಿರ್ದೇಶಕರಾದ ನಾಡೋಜ ಡಾ. ಮಹೇಶ್ ಜೋಶಿ, ಅಂತರಾಷ್ಟ್ರೀಯ ಖ್ಯಾತಿಯ ವಿದ್ವಾಂಸರಾದ ವಿದ್ಯಾ ವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಡಾ. ಎಚ್ ಎಲ್ ರಾವ್ ವಹಿಸಲಿದ್ದಾರೆ.



