ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ದೇಶದಲ್ಲಿ ಇನ್ನೂ ಪ್ರಕರಣ ಪತ್ತೆಯಾಗಿಲ್ಲ, ಅಕ್ಕ ಪಕ್ಕದ ದೇಶಗಳಲ್ಲಿಯೂ ಎಬೋಲಾ ಪ್ರಕರಣ ದಾಖಲಾಗಿಲ್ಲ. ಆದರೂ ಕೂಡ ನಾವು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದರು.
ಆಫ್ರಿಕನ್ ದೇಶಗಳಾದ ಉಗಾಂಡಾ, ಕಾಂಗೋ ಮುಂತಾದ ದೇಶಗಳಿಂದ ಬಂದವರನ್ನು 21 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗುವುದು. ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡಲು ಸೂಚಿಸಲಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ವಿನಂತಿಸುತ್ತೇನೆ. ಸರ್ಕಾರ ಎಲ್ಲ ರೀತಿಯ ಮುಂಜಾಗ್ರತೆ ವಹಿಸಿದೆ. ಕೇಂದ್ರ ಸರ್ಕಾರವೂ ಮಾರ್ಗಸೂಚಿ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.



