ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟು ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕವಾಗಿರಲಿದೆ. ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬದಲಾವಣೆಗೆ ಮುಂದಾಗಿದೆ ಎಂದು ಆರೋಪಿಸಿದ ಅವರು ದೆಹಲಿಯಲ್ಲಿ ಐದು ಗಂಟೆಗಳ ಕಾಲ ನಡೆದ ಸಭೆಯ ಬಳಿಕ ಮುಖ್ಯಮಂತ್ರಿ ರಾಜೀನಾಮೆಗೆ ನಿರ್ಧಾರವಾಗಿದೆ. ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ಆರೋಪಗಳಿಂದ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ರಾಜೀನಾಮೆ ಬಳಿಕ ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಮುಖ್ಯವಲ್ಲ. ಹೊಸ ನಾಯಕನ ಆಯ್ಕೆ ಅಷ್ಟು ಸುಲಭವಾಗುವುದಿಲ್ಲ. ರಾಜ್ಯ ಸರ್ಕಾರದಲ್ಲಿ ಗೊಂದಲ ಮತ್ತಷ್ಟು ಹೆಚ್ಚಾಗಲಿದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಅನುಭವಸಂಪನ್ನ ಮುಖ್ಯಮಂತ್ರಿ ಆದರೂ ಅವರ ಅವಧಿಯಲ್ಲಿ ರಾಜ್ಯದ ಸಾಲ ಹತ್ತು ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಆಂತರಿಕ ಕಚ್ಚಾಟದಿಂದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.
ವಾಲ್ಮೀಕಿ ನಿಗಮ ಹಾಗೂ ಮೂಡಾ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿದ ಅವರು, ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಟೀಕಿಸಿದರು.
ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವನ್ನು ಬದಲಾಯಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಮುಖ್ಯಮಂತ್ರಿ ಬದಲಾವಣೆಯ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ. ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ ವಿಜಯೇಂದ್ರ, ಬಿಜೆಪಿ ಸಂಘಟನೆ ಬಲಪಡಿಸಿ ಮತ್ತೆ ಅಧಿಕಾರಕ್ಕೆ ಬರಲು ಸಿದ್ಧತೆ ನಡೆಸುತ್ತಿದೆ ಎಂದರು.
ನಾವು ರಾಜ್ಯದ ಜನತೆಗೆ ಏನು ಕೊಡಬೇಕು ಎನ್ನುವುದರ ಬಗ್ಗೆ ಯೋಚಿಸುತ್ತಿದ್ದೇವೆ. ಅಭಿವೃದ್ಧಿ ಇಲ್ಲದ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರದ ಪತನ ಖಚಿತ ಎಂದು ಹೇಳಿದರು.



