ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಾದವರು ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ತುಮಕೂರಿನವರು ಎಂದು ತಿಳಿದುಬಂದಿದೆ.
ಬಂಧಿತರಲ್ಲಿ ಪುನೀತ್ ‘ಡಿ-ಕಮ್ಯುನಿಟಿ’ ಎಂಬ ಫೇಸ್ಬುಕ್ ಪೇಜ್ನ ಅಡ್ಮಿನ್ ಆಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ತನಿಖೆಯ ಪ್ರಕಾರ, ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಈ ಮೂವರು ಸಂಚು ರೂಪಿಸಿದ್ದು, ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್ಗೆ ಒತ್ತಡ ಹೇರಿದ ಆರೋಪ ಎದುರಿಸುತ್ತಿದ್ದಾರೆ. ಇದರಿಂದ ನಟ ದರ್ಶನ್ ಮತ್ತು ಇತರ ಆರೋಪಿಗಳ ಕಾನೂನು ಸಂಕಷ್ಟಗಳು ಮತ್ತಷ್ಟು ಹೆಚ್ಚಾಗಿವೆ ಎಂದು ಹೇಳಲಾಗುತ್ತಿದೆ.
ಇನ್ನು ಎಂ.ಆರ್.ಪುನೀತ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಪಾತ್ರಧಾರಿಯಾಗಿದ್ದು, ಶವ ಸಾಗಿಸಲು ಬಳಸಲಾದ ಸ್ಕಾರ್ಪಿಯೋ ಕಾರು ಸಂದೀಪ್ಗೆ ನೀಡಿದ್ದು ಕೂಡ ಅವನೇ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ನಂತರ ಆ ಕಾರನ್ನು ತೊಳೆಸಿ ದರ್ಶನ್ಗೆ ನೀಡಲಾಗಿದೆ ಎಂಬ ಹೇಳಿಕೆಯೂ ದಾಖಲಾಗಿದೆ.
ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದಿಲ್ಲ ಎಂದು ಹೇಳುವಂತೆ ಸಂದೀಪ್ ಮೇಲೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಕುರಿತು ಸಂದೀಪ್ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದಾನೆ. ಇದರ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.
ಜೂನ್ 8, 2024ರಂದು ಆರ್.ಆರ್.ನಗರ ಶೆಡ್ನಲ್ಲಿ ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದು, ಮೊದಲ ಆರೋಪಿ ಪವಿತ್ರಾ ಗೌಡ ಕೂಡ ಜೈಲಿನಲ್ಲಿದ್ದಾರೆ.



