ಬೆಂಗಳೂರು : ಪೂರ್ವ ಬೆಂಗಳೂರಿನ ಐಟಿ ಕಂಪನಿಯೊಂದರ ಆವರಣದಲ್ಲಿರುವ ಕ್ರೆಚ್ ನಲ್ಲಿ (ಶಿಶುವಿಹಾರ) ಮಕ್ಕಳ ಮೇಲೆ ದೌರ್ಜನ್ಯ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಘಟನೆಯ ವಿವರ
ಘಟನೆಗೆ ಸಂಬಂಧಿಸಿದಂತೆ ಐಟಿ ಕಂಪನಿಯ ಕ್ರೆಚ್ನಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾ, ವಿಜಯಲಕ್ಷ್ಮಿ, ಭವಾನಿ, ಸಿಂಧು ಮತ್ತು ಬಿಂದು ಎಂಬ ಐವರು ಮಹಿಳಾ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
2-3 ವರ್ಷದ ಮಕ್ಕಳನ್ನು ವಾಷಿಂಗ್ ಮೆಷಿನ್ನಲ್ಲಿ ಹಾಕುವುದು, ಬಾಯಿಗೆ ಟಾಯ್ಲೆಟ್ ಜೆಟ್ ಸ್ಪ್ರೇ ಮೂಲಕ ನೀರು ಸಿಂಪಡಿಸುವುದು, ಅಳುವುದನ್ನು ನಿಲ್ಲಿಸಲು ಶೌಚಾಲಯದಲ್ಲಿ ಕೂಡಿ ಹಾಕುವುದು ಮತ್ತು ಬೆದರಿಸುವಂತಹ ಕೃತ್ಯಗಳನ್ನು ಎಸಗಿದ್ದಾರೆ ಎಂಬ ಆರೋಪವಿದೆ ಎನ್ನಲಾಗಿದೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಮಕ್ಕಳ ರಕ್ಷಣಾ ಅಧಿಕಾರಿಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ “ಇದು ಅತ್ಯಂತ ಗಂಭೀರವಾದ ಪ್ರಕರಣ. ಯಾರನ್ನೂ ಬಿಡುವುದಿಲ್ಲ, ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ಮಹಿಳಾ ಡಿಸಿಪಿ ಮತ್ತು ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ.
ಕ್ರಮ ಕೈಗೊಳ್ಳುವುದರ ಜೊತೆಗೆ, ನಗರದಲ್ಲಿರುವ ಇತರೆ ಕ್ರೆಚ್ಗಳು ನಿಯಮಗಳನ್ನು ಪಾಲಿಸುತ್ತಿವೆಯೇ ಮತ್ತು ಅವು ಅಧಿಕೃತವಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾನೂನು ಕ್ರಮ
ಆರೋಪಿಗಳ ವಿರುದ್ಧ ಕಿಶೋರ್ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ಏಜೆನ್ಸಿಸ್)



