ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿಟಿಎಂ ಲೇಔಟ್ನಲ್ಲಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ಕಾರ್ಯವೈಖರಿ ವಿವಾದಕ್ಕೆ ಕಾರಣವಾಗಿದ್ದು, ಮಸೀದಿ ಹಾಗೂ ಖಾಸಗಿ ಕಚೇರಿ ಆವರಣದಲ್ಲಿ ಟೇಬಲ್ ಹಾಕಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ಬಿಎಲ್ಒಗಳು ಮನೆ ಮನೆಗೆ ತೆರಳಿ ಮತದಾರರ ಮಾಹಿತಿಯನ್ನು ಪರಿಶೀಲಿಸಿ, ಅಗತ್ಯ ಅರ್ಜಿಗಳನ್ನು ವಿತರಿಸಬೇಕು. ಆದರೆ, ಬಿಟಿಎಂ ಲೇಔಟ್ನ ಕೆಲ ಬಿಎಲ್ಒಗಳು ನಿಯಮಿತ ವಿಧಾನವನ್ನು ಅನುಸರಿಸದೆ ಧಾರ್ಮಿಕ ಕೇಂದ್ರ ಹಾಗೂ ಖಾಸಗಿ ಸ್ಥಳದಲ್ಲಿ ಪ್ರಕ್ರಿಯೆ ನಡೆಸಿರುವುದು ಪ್ರಶ್ನೆಗೆ ಕಾರಣವಾಗಿದೆ.
ಇನ್ನೂ ಮಾಹಿತಿಯ ಪ್ರಕಾರ, ಕಳೆದ ಎರಡು ದಿನಗಳ ಹಿಂದೆ ಬಿಟಿಎಂ ಲೇಔಟ್ನ ಮಸೀದಿಯೊಂದರಲ್ಲಿ ಹಾಗೂ ಖಾಸಗಿ ಕಚೇರಿ ಮುಂಭಾಗದಲ್ಲಿ ಟೇಬಲ್ಗಳನ್ನು ಹಾಕಿಕೊಂಡು ಎಸ್ಐಆರ್ ಪ್ರಕ್ರಿಯೆ ನಡೆಸಲಾಗುತ್ತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದು, ಕೆಲಕಾಲ ಜನಸಂದಣಿ ಉಂಟಾಗಿತ್ತು. ಧಾರ್ಮಿಕ ಕೇಂದ್ರ ಹಾಗೂ ಖಾಸಗಿ ಜಾಗದಲ್ಲಿ ಚುನಾವಣಾ ಸಂಬಂಧಿತ ಪ್ರಕ್ರಿಯೆ ನಡೆಸಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ವಿರೋಧ ವ್ಯಕ್ತವಾಗುತ್ತಿದ್ದಂತೆ ಬಿಎಲ್ಒಗಳು ಸ್ಥಳವನ್ನು ತೊರೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆಯು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಲಾಗಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಸಂಬಂಧಿತ ಅಧಿಕಾರಿಗಳ ನಡೆ ಕುರಿತು ಸ್ಪಷ್ಟನೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.



