ಬೆಂಗಳೂರು : ಟಾಟಾ ಪವರ್ ಸಂಸ್ಥೆಯ ಸಮಾನಾಂತರ ವಿದ್ಯುತ್ ವಿತರಣೆಗೆ ಪರವಾನಗಿ ನೀಡುವ ಅರ್ಜಿಯನ್ನು ರಾಜ್ಯ ಸರ್ಕಾರ ವಿರೋಧಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಎಲ್ಲಾ ಎಸ್ಕಾಂಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಸಮಗ್ರ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಕೆಇಆರ್ಸಿ ಈ ಅರ್ಜಿಯ ಕುರಿತು ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿಯ ಪರವಾನಿಗೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು ಎಂದು ಸಿಎಂ ತಿಳಿಸಿದ್ದಾರೆ.
ಟಾಟಾ ಪವರ್ ಸಂಸ್ಥೆ ಕೆಇಆರ್ಸಿಗೆ ನೇರವಾಗಿ ಅರ್ಜಿ ಸಲ್ಲಿಸಿದ್ದು, ಆಯೋಗವು ಎಸ್ಕಾಂಗಳ ಅಭಿಪ್ರಾಯವನ್ನು ಕೇಳಿದೆ. ರಾಜ್ಯ ಸರ್ಕಾರಕ್ಕೆ ನೇರ ಅರ್ಜಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ, ಲಭ್ಯವಿರುವ ಎಲ್ಲಾ ಎಸ್ಕಾಂಗಳು ಯಾವುದೇ ಲೋಪವಿಲ್ಲದಂತೆ ಸಮಗ್ರ ಆಕ್ಷೇಪಣೆ ಸಲ್ಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರ ಈ ಸಮಾನಾಂತರ ವಿದ್ಯುತ್ ವಿತರಣಾ ವ್ಯವಸ್ಥೆಗೆ ಯಾವುದೇ ಒಪ್ಪಿಗೆ ನೀಡುವುದಿಲ್ಲ ಎಂಬ ನಿಲುವನ್ನು ಕೆಇಆರ್ಸಿಗೆ ಸ್ಪಷ್ಟವಾಗಿ ತಿಳಿಸಲಾಗುವುದು ಎಂದಿದ್ದಾರೆ. ಇದೇ ವೇಳೆ, ರಾಜ್ಯ ಸರ್ಕಾರ ಹೊಸದಾಗಿ ಸ್ಥಾಪಿಸಿರುವ ‘ನಾಗರಿಕ ಸೇವಾ ದೂರು ಪರಿಹಾರ ಇಲಾಖೆ’ಗೆ ಹಿರಿಯ ಐಎಎಸ್ ಅಧಿಕಾರಿ ಹರ್ಷ್ ಗುಪ್ತಾ ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಈ ಇಲಾಖೆಯ ಉದ್ದೇಶ ಸಾರ್ವಜನಿಕರ ದೂರುಗಳನ್ನು ಆಲಿಸುವುದು, ಸಮಸ್ಯೆಗಳನ್ನು ಸಂಬಂಧಿತ ಇಲಾಖೆಗೆ ತ್ವರಿತವಾಗಿ ತಲುಪಿಸುವುದು ಹಾಗೂ ಪರಿಹಾರ ವ್ಯವಸ್ಥೆಯನ್ನು ಬಲಪಡಿಸುವುದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಬೇಕು ಎಂದು ಸೂಚಿಸಲಾಗಿದ್ದು, ತಾಲೂಕು ಮಟ್ಟದಲ್ಲೇ ಅರ್ಜಿ ಸಲ್ಲಿಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ತಾವು ಕೂಡ ಅಚ್ಚರಿ ಭೇಟಿ ನೀಡುವುದಾಗಿ ಸಿಎಂ ಹೇಳಿದ್ದಾರೆ.
ಬಸ್ ಪ್ರಯಾಣ ದರ ಹೆಚ್ಚಳದ ಕುರಿತು ಪ್ರತಿಕ್ರಿಯಿಸಿದ ಅವರು, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಯಿಂದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.



