ಪಾಂಡವಪುರ : ಸರ್ಕಾರಿ ಜಮೀನನ್ನು ಖಾಸಗಿ ಧಾರ್ಮಿಕ ಸಂಸ್ಥೆಗೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಶುಕ್ರವಾರ ಪಾಂಡವಪುರ ಉಪವಿಭಾಗಾಧಿಕಾರಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದೆ.
ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಧಾರ್ಮಿಕ ಸಂಸ್ಥೆಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ಇತ್ತೀಚೆಗೆ ಉಪಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಂಬಂಧಿತ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿದರು. ಇದಕ್ಕೂ ಮುನ್ನ ಮಹದೇವಪುರ ಗ್ರಾಮ ಪಂಚಾಯಿತಿ ಹಾಗೂ ಶ್ರೀರಂಗಪಟ್ಟಣ ತಾಲೂಕು ಕಚೇರಿಗೂ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿತ್ತು.
ಮೂರು ಗಂಟೆಗಳಿಗೂ ಅಧಿಕ ಕಾಲ ನಡೆದ ಈ ಪರಿಶೀಲನೆಯಲ್ಲಿ ಭೂಮಿಯ ಮಾಲೀಕತ್ವ, ಹಸ್ತಾಂತರ ಪ್ರಕ್ರಿಯೆ ಹಾಗೂ ಅನುಮೋದನೆ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ಈ ಸಂದರ್ಭದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಲೇಪಾಕ್ಷಮೂರ್ತಿ, ಸಿಬ್ಬಂದಿ ದಿನೇಶ್, ರಾಮಲಿಂಗ, ಯೋಗೇಶ್ ಇದ್ದರು.



