ಬೆಂಗಳೂರು : ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಈ ಕುರಿತು ಎಸ್ಐಆರ್ನಲ್ಲಿ ಲೋಪಗಳಿವೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಚುನಾವಣಾ ಆಯೋಗದ್ದೇ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ? ಅವರದ್ದೇ ತಾನೆ ಜವಾಬ್ದಾರಿ ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರ ಯಾರ ಮೇಲೂ ಎಸ್ಐಆರ್ ಮಾಡಿಸಿಕೊಳ್ಳುವಂತೆ ಒತ್ತಡ ಹೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಜನರಲ್ಲಿ ಎಸ್ಐಆರ್ ಕುರಿತು ಆತಂಕ ಮತ್ತು ಅನುಮಾನಗಳಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ 12 ಪ್ರಶ್ನೆಗಳನ್ನು ಕೇಳಿದ್ದರೂ ಇದುವರೆಗೆ ಉತ್ತರ ನೀಡಿಲ್ಲ ಎಂದು ಅವರು ಆರೋಪಿಸಿದರು. ಈ ಪ್ರಕ್ರಿಯೆಗೆ ಸಂಬಂಧಿಸಿದ ಗೊಂದಲಗಳನ್ನು ನಿವಾರಿಸುವ ಹೊಣೆಗಾರಿಕೆ ಚುನಾವಣಾ ಆಯೋಗದ್ದೇ ಹೊರತು ರಾಜ್ಯ ಸರ್ಕಾರದ್ದಲ್ಲ ಎಂದರು.
ಬೂತ್ ಮಟ್ಟದ ಅಧಿಕಾರಿಗಳು (BLO) ರಾಜ್ಯ ಸರ್ಕಾರದ ಅಧೀನದಲ್ಲಿದ್ದರೂ, ಅವರಿಗೆ ನಿರ್ದೇಶನ ನೀಡುವುದು ಚುನಾವಣಾ ಆಯೋಗವೇ. ಎಸ್ಐಆರ್ ಪ್ರಕ್ರಿಯೆಯಲ್ಲಿ ಲೋಪಗಳಿದ್ದರೆ ಅದಕ್ಕೆ ಕ್ರಮ ಕೈಗೊಳ್ಳಬೇಕಿರುವುದು ಕೂಡ ಆಯೋಗವೇ ಎಂದು ಹೇಳಿದರು.
ಇನ್ನೂ ಎಸ್ಐಆರ್ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಆದರೆ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳಲ್ಲಿ ಆತಂಕ ಹೆಚ್ಚಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಕೇಂದ್ರ ಚುನಾವಣಾ ಆಯೋಗದಿಂದ ಎಸ್ಐಆರ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಬೇಕು ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರದಲ್ಲಿ ನಿಮ್ಮದೇ ಸರ್ಕಾರ ಇದೆ. ಅಗತ್ಯ ಕ್ರಮ ಕೈಗೊಳ್ಳಿ. ನಾವು ಎಸ್ಐಆರ್ ವಿರೋಧಿಗಳಲ್ಲ; ಅದು ಪಾರದರ್ಶಕವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಒತ್ತಾಯ ಎಂದು ಹೇಳಿದರು.
ಇದೇ ವೇಳೆ ಮಂಡ್ಯ ಫೈರಿಂಗ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಯಾವುದೇ ಅಧಿಕಾರಿ ಕಾನೂನಿಗಿಂತ ಮೇಲಲ್ಲ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುವಂತೆ ಡಿಜಿಪಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.



