ಟಿ.ನರಸೀಪುರ : ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಮಾದಕ ವಸ್ತುವಿನ ಅಮಲಿನಲ್ಲಿ ಯುವಕನೊಬ್ಬ ರಾತ್ರಿ ವೇಳೆ ರಸ್ತೆಗಳಲ್ಲಿ ಓಡಾಡುತ್ತ ಸಾರ್ವಜನಿಕರಲ್ಲಿ ತೀವ್ರ ಭೀತಿ ಹುಟ್ಟಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಪಟ್ಟಣದಲ್ಲಿ ಚಿಂದಿ ಆಯುವ ಕೆಲಸ ಮಾಡುವ ಹುಡುಗನೊಬ್ಬ ಇತ್ತೀಚೆಗೆ ‘ಸಲ್ಯೂಷನ್’ ಸೇವಿಸಿ ಏರಿಯಾದಲ್ಲಿ ರಂಪಾಟ ಮಾಡುತ್ತಿದ್ದಾನೆ. ಸಲ್ಯೂಷನ್ ಸೇವಿಸಿದ ಮತ್ತಿನಲ್ಲಿ ಈತ ರಸ್ತೆಗಳ ಮಧ್ಯೆ ಅಡ್ಡಾದಿಡ್ಡಿ ಓಡಾಡುತ್ತಿರುವುದು ಸ್ಥಳೀಯರ ನಿದ್ದೆಗೆಡಿಸಿದೆ.
ಮಹಿಳೆಯರು ಮತ್ತು ಶಾಲಾ ಮಕ್ಕಳು ದಿನನಿತ್ಯ ಸಂಚರಿಸುವ ಮುಖ್ಯ ರಸ್ತೆಯಲ್ಲೇ ಈತ ಮಾದಕ ವಸ್ತುವಿನ ಅಮಲಿನಲ್ಲಿ ತೂರಾಡುತ್ತಿರುವುದರಿಂದ ಸಾರ್ವಜನಿಕರ ಸುರಕ್ಷತೆಗೆ ಆತಂಕ ಎದುರಾಗಿದೆ. ಅಷ್ಟಕ್ಕೂ ಈ ಚಿಂದಿ ಆಯುವ ಹುಡುಗನಿಗೆ ಇಂತಹ ಮಾದಕ ಸಲ್ಯೂಷನ್ ಎಲ್ಲಿಂದ ಸಿಗುತ್ತಿದೆ ಎಂಬುದು ಸದ್ಯ ನಿಗೂಢವಾಗಿದ್ದು, ಸಾರ್ವಜನಿಕರಲ್ಲಿ ಹತ್ತಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಈ ಅಪ್ರಾಪ್ತ ಯುವಕ ಹೀಗೆಯೇ ಬಿಟ್ಟರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುವ ಸಾಧ್ಯತೆ ಇದೆ ಎಂದು ಬಡಾವಣೆಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ತೀವ್ರ ಆಗ್ರಹ ಪಡಿಸಿದ್ದಾರೆ.



