ಬೆಂಗಳೂರು : ರಾಜಧಾನಿ ಬೆಂಗಳೂರಿನ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗೆ ಶಿಕ್ಷಕರು ಅಮಾನವೀಯವಾಗಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆಯಿಂದ ಮನನೊಂದ 7ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಮರಿಯಪ್ಪನ ಪಾಳ್ಯದಲ್ಲಿರುವ ಸೆಂಟ್ ಫಿಲೋಮಿನಾಸ್ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಸಣ್ಣ ಗಲಾಟೆ ಮಾಡಿಕೊಂಡಿದ್ದ ಕಾರಣಕ್ಕೆ ವಿದ್ಯಾರ್ಥಿಗೆ ಶಿಕ್ಷಕರು ಬುದ್ಧಿವಾದ ಹೇಳುವ ಬದಲು ಕ್ರೂರವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಯ ಮೈಮೇಲೆ ಬಾಸುಂಡೆಗಳು ಮೂಡುವಂತೆ ಹಲ್ಲೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಘಟನೆಯಿಂದ ತೀವ್ರ ಅವಮಾನ ಹಾಗೂ ಮಾನಸಿಕವಾಗಿ ನೊಂದ ವಿದ್ಯಾರ್ಥಿ ಮನೆಗೆ ಬಂದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ವಿದ್ಯಾರ್ಥಿಯನ್ನು ರಕ್ಷಿಸಿ ನಾಯಂಡಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ.
ಮಗನ ಸ್ಥಿತಿಯಿಂದ ಪೋಷಕರು ತೀವ್ರ ಆಘಾತಕ್ಕೊಳಗಾಗಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲೂ ಒತ್ತಾಯ ಕೇಳಿಬಂದಿದೆ.



