ರಾಯಚೂರು : ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಬೀದಿನಾಯಿಗಳ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ 18 ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪ್ನಲ್ಲಿ ನಡೆದಿದೆ.
ಅನಂ (18 ತಿಂಗಳು) ಮೃತಪಟ್ಟ ಮಗು. ನಿದ್ದೆಯಿಂದ ಎದ್ದ ಮಗು ಮನೆಯ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ಆರೇಳು ಬೀದಿನಾಯಿಗಳು ದಾಳಿ ನಡೆಸಿವೆ. ನಾಯಿಗಳು ಮಗುವನ್ನು ಎಳೆದಾಡಿ ಮನಬಂದಂತೆ ಕಚ್ಚಿದ ಪರಿಣಾಮ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಗು ಕೊನೆಯುಸಿರೆಳೆದಿದೆ.
ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀದಿನಾಯಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತವನ್ನು ಒತ್ತಾಯಿಸಿದ್ದಾರೆ.



