ರಾಯಚೂರು : ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ನವವಿವಾಹಿತ ವಕೀಲರೊಬ್ಬರು ಹೂಳಿನಲ್ಲಿ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ನಡೆದಿದೆ.
ಉಮಲೂಟಿ ಗ್ರಾಮದ ನಿವಾಸಿ ಹಾಗೂ ವೃತ್ತಿಯಲ್ಲಿ ವಕೀಲರಾಗಿದ್ದ ಹನೀಫ್ (30) ಮೃತಪಟ್ಟವರು. ಅವರಿಗೆ ಕೇವಲ ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದುಬಂದಿದ್ದು, ಹನೀಫ್ ಅವರು ಸ್ನೇಹಿತರೊಂದಿಗೆ ಗ್ರಾಮದ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದರು. ಈ ವೇಳೆ ಹೊಂಡದಲ್ಲಿದ್ದ ಹೂಳಿನ ಬಗ್ಗೆ ಅರಿವಿಲ್ಲದೆ ನೀರಿಗೆ ಇಳಿದಿದ್ದಾರೆ. ದುರದೃಷ್ಟವಶಾತ್ ಹೂಳಿನಲ್ಲಿ ಸಿಲುಕಿಕೊಂಡ ಕಾರಣ ಹೊರಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಹೊಂಡದಿಂದ ಹೊರತೆಗೆದರು. ನವವಿವಾಹಿತ ಯುವ ವಕೀಲರ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



