ಚಾಮರಾಜನಗರ : ಶಿಕ್ಷಕರು ನಿರಂತರ ಅಧ್ಯಯನಶೀಲರಾದರೆ ಮಾತ್ರ ಪರಿಣಾಮಕಾರಿಯಾದ ಬೋಧನೆ ಸಾಧ್ಯ. ಇದರಿಂದ ಮಕ್ಕಳಿಗೆ ಗುಣಮಟ್ಟದ ಜೊತೆಗೆ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬಹುದಾಗಿದೆ. ಆಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೋಮಣ್ಣೇಗೌಡ ಅಭಿಪ್ರಾಯಪಟ್ಟರು.
ಅವರು ನಗರದ ಗುಂಡ್ಲುಪೇಟೆ ವೃತ್ತದಲ್ಲಿರುವ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ವರ್ಷದ ದ್ವಿತೀಯ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಕ್ಷೇತ್ರ ಸಂಪನ್ಮೂಲ ಕೇಂದ್ರ & ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಭೇಟಿ ಹಾಗೂ ಮಾಹಿತಿ ಸಂಗ್ರಹಣೆಯ ಎರಡು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರಸ್ತುತ ವಿದ್ಯಮಾನದಲ್ಲಿ ಯುವ ಜನತೆಯಲ್ಲಿ ಸ್ಪರ್ಧಾತ್ಮಕ ಪ್ರವೃತಿ ಹೆಚ್ಚಿದೆ. ಉದ್ಯೋಗಾವಕಾಶಗಳಿಗಾಗಿ ಪ್ರತಿ ರಂಗದಲ್ಲಿಯೂ ಸ್ಪರ್ಧೆ ಏರ್ಪಡುತ್ತಿದೆ.

ಶಿಕ್ಷಣ ಕ್ಷೇತ್ರವು ಇದಕ್ಕೆ ಹೊರತಲ್ಲ. ಆದ್ದರಿಂದ ಶಿಕ್ಷಕರು ನಿರಂತರ ಅಧ್ಯಯನಶೀಲರಾದರೆ ಮಾತ್ರ ಪರಿಣಾಮಕಾರಿಯಾದ ಬೋಧನೆ ಸಾಧ್ಯ. ಇದರಿಂದ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬಹುದಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೆಕ್ಕಿ ತೆಗೆಯುವ ಜವಾಬ್ದಾರಿ ಶಿಕ್ಷಕನ ಮೇಲಿರುತ್ತದೆ. ಆದ್ದರಿಂದ ಶಿಕ್ಷಕರು ಹಾಗೂ ಮುಂದೆ ಶಿಕ್ಷಕರಾಗಲು ಹೊರಟಿರುವ ಪ್ರಶಿಕ್ಷಣಾರ್ಥಿಗಳಾದ ತಾವು ಸಹ ಪರಿಣಾಮಕಾರಿಯಾದ ಅಧ್ಯಯನ ನಡೆಸಿ, ಉತ್ತಮ ಭವಿಷ್ಯ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಮುಂದುವರೆಯಬೇಕೆoದು ಕರೆ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ರಾಜೀವ್ ಮಾತನಾಡಿ ಸಮಾಜದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದ್ದು, ಶಿಕ್ಷಕನೋರ್ವ ತಪ್ಪು ಮಾಡಿದರೆ, ಇಡೀ ಒಂದು ಪೀಳಿಗೆಯನ್ನೇ ಸಂಕಷ್ಟಕ್ಕೆ ದೂಡಿದಂತಾಗುತ್ತದೆ.
ಶಿಕ್ಷಕರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅವರು ಸಮಾಜದಲ್ಲಿರುವ ಅಂಕು ಡೊಂಕುಗಳನ್ನು ತಿದ್ದಿ ಸಮಾಜವನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಬಹುಮುಖ್ಯ ಪಾತ್ರ ವಹಿಸಲಿದ್ದಾರೆ. ಭವಿಷ್ಯವನ್ನು ರೂಪಿಸುವ ಗುರುವನ್ನು ವೈದಿಕರು ಬ್ರಹ್ಮನಿಗೆ ಹೋಲಿಸಿ, ಅವನಿಗೆ ಉನ್ನತ ಸ್ಥಾನ ನೀಡಿದ್ದಾರೆ. ಆದ್ದರಿಂದ ಶಿಕ್ಷಕರು ತಮ್ಮ ಜವಾಬ್ದಾರಿಯನ್ನರಿತು ಕೆಲಸ ನಿರ್ವಹಿಸಬೇಕೆಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಬಿಆರ್ಪಿಗಳಾದ ಮಹದೇವ್, ಜೇಮ್ಸ್ಸುನೀಲ್, ರೆಬೆಲ್ಲೋ, ಶಿಕ್ಷಣ ಸಂಯೋಜಕರಾದ ಕುಮಾರ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಕೆ.ಸಿ.ಬಸವಣ್ಣ, ಉಪನ್ಯಾಸಕರಾದ ಯೋಗೀಶ್, ಎಸ್.ಎನ್.ರಾಜು ಸೇರಿದಂತೆ ಇತರರು ಹಾಜರಿದ್ದರು.