ಮಡಿಕೇರಿ : ಇದೇ ಆ. ೩೦ ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಮುಂದಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಅಗತ್ಯ ಸಿದ್ಧತೆ ಸಂಬಂಧ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ಕುಟುಂಬದ ಯಜಮಾನಿ ಮಹಿಳೆಗೆ ೨ ಸಾವಿರ ರೂ. ವನ್ನು ನೇರ ನಗದು ಮೂಲಕ ತಲುಪಿಸುವ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಇದೊಂದು ರಾಜ್ಯ ಮಟ್ಟದ ಸರ್ಕಾರಿ ಕಾರ್ಯಕ್ರಮವಾಗಿದ್ದು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಈ ಐದು ಜಿಲ್ಲೆಯ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.
ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆ ಗೃಹಲಕ್ಷ್ಮಿ ಪ್ರತಿ ಮನೆ ಯಜಮಾನಿಗೆ ೨ ಸಾವಿರ ರೂ. ನೀಡುವ ಯೋಜನೆ ಜಾರಿಯು ಇದೇ ಆಗಸ್ಟ್, ೩೦ ರಂದು ಮೈಸೂರಿನಲ್ಲಿ ಚಾಲನೆಗೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ೧೦೩ ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಿಂದ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆದುಕೊಂಡುಹೋಗುವುದು ಮತ್ತು ಬರುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದರು.
ನೋಡಲ್ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆಗಸ್ಟ್, ೩೦ ರಂದು ಬೆಳಗ್ಗೆ ೧೦ ಗಂಟೆಗೆ ಮೈಸೂರಿನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಫಲಾನುಭವಿಗಳು ಇರಬೇಕು. ಆ ನಿಟ್ಟಿನಲ್ಲಿ ಪ್ರತೀ ಗ್ರಾ.ಪಂ.ನಿಂದ ಆಗಮಿಸುವ ಫಲಾನುಭವಿಗಳ ಪಟ್ಟಿಯನ್ನು ಖಾತರಿಪಡಿಸಿಕೊಳ್ಳುವಂತೆ ಸಚಿವರಾದ ಎನ್.ಎಸ್.ಭೋಸರಾಜು ಅವರು ಹೇಳಿದರು.
ಗ್ರಾ.ಪಂ.ಜೊತೆಗೆ ಮಡಿಕೇರಿ ನಗರ, ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಟಣಗಳಿಂದಲೂ ಬಸ್ ವ್ಯವಸ್ಥೆ ಮಾಡುವಂತೆ ಶಾಸಕರು ಸಲಹೆ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನೋಡಲ್ ಅಧಿಕಾರಿಗಳಾಗಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ಗಳು ಆಯಾಯ ಗ್ರಾ.ಪಂ. ಕಾರ್ಯಾಲಯದಿಂದ ಹೊರಡಲಿದೆ. ಪ್ರತೀ ಬಸ್ಗೆ ಕನಿಷ್ಠ ೫೦ ರಂತೆ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಜಿಲ್ಲೆಯಿಂದ ೫,೧೫೦ ಮಂದಿ ಫಲಾನುಭವಿಗಳನ್ನು ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.