ಕೆ.ಆರ್.ನಗರ: ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಬೇಕಾಗುವ ಎಲ್ಲಾ ರೀತಿಯ ಸಹಕಾರ ನೀಡುವುದರ ಜತೆಗೆ ಸರ್ಕಾರದಿಂದ ಬರುವಂತಹಾ ಸೌಲಭ್ಯಗಳನ್ನು ಕೊಡಿಸಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಪಿಎಲ್ ಡಿ ಬ್ಯಾಂಕ್ ರೈತ ಸಮುದಾಯ ಭವನದಲ್ಲಿ ಸೃಜನ ಲೇಖಕರು ಮತ್ತು ಕಲಾವಿದರ ಬಳಗ ಹಾಗೂ ವಿಚಾರ ಪ್ರಜ್ಞೆ ಪತ್ರಿಕಾ ಬಳಗದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಆಧುನಿಕ ಜಗತ್ತಿನಲ್ಲಿ ಉತ್ತಮ ಶಿಕ್ಷಣ ಪಡೆಯಲು ಸ್ಪರ್ದೆ ಅನಿರ್ವಾಯವಾಗಿದೆ ಇದರ ಜತೆಗೆ ಸಾಕಷ್ಟು ಆರ್ಥಿಕ ಸಂಪನ್ಮೂಲವೂ ಬೇಕಾಗಿದ್ದು ಇದನ್ನು ಅರಿತು ವಿದ್ಯಾರ್ಥಿಗಳು ಅಧ್ಯಾಯನ ಮಾಡಬೇಕು ಎಂದು ಸಲಹೆ ನೀಡಿದ ಶಾಸಕರು ಪೋಷಕರು ಕಷ್ಟಕ್ಕೆ ಹೆದರದೆ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಮಕ್ಕಳು ಮರೆಯಬಾರದು ಎಂದರು.
ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಮಾತ್ರ ಆದ್ಯತೆ ನೀಡುವ ಬದಲು ಇಸ್ರೋ ಅಂತಹಾ ಸಂಸ್ಥೆಗಳಲ್ಲಿ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವ ಅಂಬಲವನ್ನು ಹೊಂದಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ ಶಾಸಕ ಡಿ.ರವಿಶಂಕರ್ ಉದ್ಯೋಗದ ಜತೆಗೆ ಕೃಷಿ ಸೇರಿದಂತೆ ಇತರ ಕ್ಷೇತ್ರಗಳಲ್ಲೂ ಸಾಧನೆ ಮಾಡಬಹುದಾದ ಶಿಕ್ಷಣವನ್ನು ಪಡೆಯಬೇಕು ಎಂದು ತಿಳಿಸಿದರು.
ದೇಶಕ್ಕೆ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ದೇಶದ ಇತಿಹಾಸ ಮತ್ತು ಸಂಸ್ಕೃತಿಯನ್ನು ಅಧ್ಯಾಯನ ಮಾಡುವುದರ ಜತೆಗೆ ಒಳ್ಳೆಯ ಸಂಸ್ಕಾರವನ್ನು ಕಲಿಯಬೇಕು ಆಗ ಸಮಾಜದ ಘನತೆ ಹೆಚ್ಚಾಗಲಿದೆ. ಈ ವಿಚಾರವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಸೃಜನ ಬಳಗದ ಅಧ್ಯಕ್ಷ ರಾ.ಸುರೇಶ್ ಕಳೆದ ೨೦ ವರ್ಷಗಳಿಂದ ಹಲವು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಅದಕ್ಕಾಗಿ ಇವರ ಬಳಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು. ಲಾಳನಹಳ್ಳಿ ಗುರುಮಲ್ಲೇಶ್ವರ ಮಠದ ಶರಣೆ ಜಯದೇವಿತಾಯಿ, ಕನಕಗುರುಪೀಠದ ಕಿರಿಯ ಶ್ರೀಗಳಾದ ಅರುಣಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದರು.
ಎಸ್ ಎಲ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಮಿರ್ಲೆ ಮಿಥಿಲ ವಿದ್ಯಾ ಸಂಸ್ಥೆಯ ಕಾರ್ಯದರ್ಶೀ ಎಂ.ಬಿ.ಲೋಕನಾಥ್, ರೋಟರಿ ಸಂಸ್ಥೆ ಅಧ್ಯಕ್ಷ ನಾಗರಾಜುಬಾವಿಕಟ್ಟಿ, ಬಳಗದ ಅಧ್ಯಕ್ಷ ರಾ.ಸುರೇಶ್, ವಲಯ ಅರಣ್ಯಾಧಿಕಾರಿ ರಶ್ಮಿ, ಸಮಾಜ ಕಲ್ಯಾಣಾಧಿಕಾರಿ ಗುರುಶಾಂತಪ್ಪ ಮಾತನಾಡಿದರು. ಪುರಸಭೆ ಮಾಜಿ ಅಧ್ಯಕ್ಷ ಕೆ.ಜಿ.ಸುಬ್ರಮಣ್ಯ, ಡಾ.ಜನಾರ್ಧನ್ ಭಟ್, ಡಾ.ನಟರಾಜು, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಎಸ್.ಹರಿಚಿದಂಬರ, ಮುಖಂಡರಾದ ಕೆ.ಎ.ಮಹೇಶ್, ನರಸಿಂಹಮೂರ್ತಿ, ಮೋಹನ್, ಕುಮಾರಸ್ವಾಮಿ, ಎಂ.ಜೆ.ರಮೇಶ್, ನಟರಾಜು, ಪಿ.ಆರ್.ವಿಶ್ವನಾಥ್ಶೆಟ್ಟಿ, ವೆಂಕಟೇಶ್ಬಾಬು, ಪ್ರದೀಪ್, ಕೆ.ಪಿ.ಭಾರತಿ ಸೇರಿದಂತೆ ಮತ್ತಿತರರು ಹಾಜರಿದ್ದರು.