ಬಳ್ಳಾರಿ: ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಸಂಸದರಾದ ವೈ.ದೇವೆಂದ್ರಪ್ಪ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು. ಸೋಮವಾರದಂದು, ನಗರದ ಜಿಲ್ಲಾ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಅಭಿವೃದ್ದಿ ಮತ್ತು ಮೇಲ್ವಿಚಾರಣಾ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನ ತೃಪ್ತಿಕರವಾಗಿಲ್ಲ. ಕೆಲವು ಕೆರೆಗಳಿಂದ ನೀರು ಸೋರಿಕೆಯಿಂದ ಬಹುಗ್ರಾಮ ಕುಡಿಯುವ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡು ನಿಷ್ಕ್ರಿಯಗೊಂಡಿವೆ ಎಂದು ಕಳವಳ ವ್ಯಕ್ತಪಡಿಸಿದ ಸಂಸದರು, ಈ ಕುರಿತು ಕಾಮಗಾರಿ ಪರಿಶೀಲಿಸಲು ಸಮಿತಿ ರಚಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶುದ್ಧ ನೀರಿನ ಘಟಕ ಯೋಜನೆಯಡಿ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಗೊಂಡಿವೆ. ಇದಕ್ಕೆ ಸಂಬಂಧಿಸಿದಂತೆ ಸಮಗ್ರ ಪರಿಶೀಲನೆ ನಡೆಸಬೇಕು. ಎಂದು ತಿಳಿಸಿದ ಸಂಸದರು, ಇದೇ ಸಂದರ್ಭದಲ್ಲಿ ಮೋಕಾ ಕೆರೆಯ ಶೀಥಲೀಕರಣ ಘಟಕಕ್ಕೆ ಭೇಟಿ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ನೀಡುವ ಬಿಸಿಯೂಟದಲ್ಲಿ ಕಬ್ಬಿಣಾಂಶ ಇರುವ ತರಕಾರಿಗಳನ್ನು ಬಳಸಬೇಕು. ಶಾಲೆಯ ಆವರಣದಲ್ಲಿ ಜಾಗವಿದ್ದಲ್ಲಿ ನರೇಗಾ ಯೋಜನೆಯ ಸೊಪ್ಪು-ತರಕಾರಿ ಬೆಳೆಯಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭೆ ಸಂಸದ ಕರಡಿ ಸಂಗಣ್ಣ, ವಿಧಾನಪರಿಷತ್ ಸದಸ್ಯರಾದ ವೈ.ಎಂ.ಸತೀಶ್, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ನಾಮನಿರ್ದೇಶಿತ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.