ದಾವಣಗೆರೆ: ಸರ್ಕಾರದ ನಿರ್ದೇಶನದಂತೆ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆಯಲ್ಲಿ 12 ಲಕ್ಷಕ್ಕಿಂತ ಹೆಚ್ಚು ಜನರಿಂದ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ.ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಲು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಅಂದು ನಮ್ಮ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ ಎಂದರು.
ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಸ್ಟೇಡಿಯಂನಲ್ಲಿ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 10 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದಲ್ಲದೇ ಎಲ್ಲಾ ತಾಲ್ಲೂಕುಗಳಲ್ಲಿ, ಗ್ರಾಮ ಪಂಚಾಯಿತಿ ಕಚೇರಿ, ಶಾಲಾ, ಕಾಲೇಜುಗಳು, ಆಸ್ಪತ್ರೆ, ಹಾಸ್ಟೆಲ್ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ಸಂಘ, ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲಾ ಕಡೆ ಈ ಕಾರ್ಯಕ್ರಮ ಏರ್ಪಡಿಸುವ ಮೂಲಕ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲು ಸೂಚನೆ ನೀಡಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆಪ್ಟೆಂಬರ್ 15 ರಂದು ಕಾರ್ಯಕ್ರಮದಲ್ಲಿ ಭಾಗವಹಿಸಲು https;//thepreamble-swdkar.in/register/ ನಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಇಲ್ಲಿ 10 ವಿವಿಧ ಆಯ್ಕೆಗಳು ಇರಲಿದ್ದು ಸೆಪ್ಟೆಂಬರ್ 12 ರೊಳಗಾಗಿ ನೊಂದಣಿ ಮಾಡಿಕೊಂಡು ಸೆ.15 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆನ್ಲೈನ್ನಲ್ಲಿ ನೊಂದಣಿ ಮಾಡುವಾಗ ಸಮಾಜ ಕಲ್ಯಾಣ ಇಲಾಖೆಯಡಿ ನಡೆಸುತ್ತಿರುವ ಹಾಸ್ಟೆಲ್, ಸರ್ಕಾರಿ, ಖಾಸಗಿ ಶಾಲಾ, ಕಾಲೇಜು, ಸಹಕಾರ ಸಂಸ್ಥೆ, ಸಾರ್ವಜನಿಕ ಉದ್ದಿಮೆ, ಸಂಸ್ಥೆಗಳು, ಇತರೆ ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳು, ಮಿಲಿಟರಿ, ಪ್ಯಾರಾಮಿಲಿಟರಿ, ಸಮವಸ್ತ್ರವುಳ್ಳ ಭದ್ರತಾ ಪಡೆ, ಆರಕ್ಷಕ ಸೇವೆ ನೀಡುತ್ತಿರುವ ಸಂಸ್ಥೆಗಳು, ಇಲಾಖೆ, ನ್ಯಾಯಾಲಯಗಳು, ಶಾಸಕಾಂಗ ಮತ್ತು ಇತರೆ ವೈಯಕ್ತಿಕ ಗುಂಪುಗಳು ಇಲ್ಲಿ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ, ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಡಿ.ಡಿ.ಪಿ.ಐ ಕೊಟ್ರೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.