ಮೈಸೂರು: ಜೆಡಿಎಸ್- ಬಿಜೆಪಿ ಮೈತ್ರಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಆದರೆ, ಎರಡು ಬಾರಿ ಸಂಸದನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಇಂದು ಮೈಸೂರು – ನಂಜನಗೂಡು ರಸ್ತೆಯ ಅಗಲೀಕರಣದ ಸಂಬಂಧ, ಜೆಎಸ್ಎಸ್ ಕಾಲೇಜಿನ ಬಳಿ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದಲ್ಲಿ ಪಕ್ಷದ ಹೈ ಕಮಾಂಡ್ ತೀರ್ಮಾನವೇ ಅಂತಿಮ. ಈ ವಿಚಾರದಲ್ಲಿ ವರಿಷ್ಠರ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ. ಮೈತ್ರಿಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಎರಡು ಬಾರಿ ಸಂಸದನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಜನ ನನಗೆ ಮತ ಕೊಡುತ್ತಾರೆ. ನಾನು ಮುಂದಿನ ಚುನಾವಣೆಯಲ್ಲಿ ಎರಡು ಲಕ್ಷ ಮತಗಳ ಲೀಡ್?ನಿಂದ ಗೆದ್ದೇ ಗೆಲ್ಲುತ್ತೇನೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ” ಎಂದು ಅವರು, ಮುಂದಿನ ಚುನಾವಣೆಯಲ್ಲಿ ನನಗೇ ಟಿಕೆಟ್, ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಏಕಾಂಗಿಯಾಗಿ ರಾಜ್ಯದ ಪ್ರವಾಸ ಮಾಡಿ, ಪಕ್ಷ ಕಟ್ಟಿದವರು ಯಡಿಯೂರಪ್ಪ ಅವರು. ಅವರು ನಮ್ಮ ಪ್ರಶ್ನಾತೀತ ನಾಯಕರು. ಅವರು ಏನೇ ತೀರ್ಮಾನ ಮಾಡಿದರೂ ಪಕ್ಷದ ಒಳಿತಿಗಾಗಿ ಮಾಡಿರುತ್ತಾರೆ. ರಾಜ್ಯದ ಜನ ಕಳೆದ ೪೦ ವರ್ಷಗಳಿಂದ ಪ್ರತಿ ೫ ವರ್ಷಕ್ಕೊಮ್ಮೆ ರಾಜ್ಯ ಸರ್ಕಾರವನ್ನು ಬದಲಿಸುತ್ತಾ ಬಂದಿದ್ದಾರೆ. ೨೦೦೪ರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನ ಬೆಂಬಲಿಸುತ್ತಾ ಬಂದಿದ್ದಾರೆ. ಅದೇ ರೀತಿ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಬೆಂಬಲ ಸಿಕ್ಕೆ ಸಿಗುತ್ತದೆ ಎಂದು ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.