ಪಿರಿಯಾಪಟ್ಟಣ: ಯುವ ಪೀಳಿಗೆ ದುಶ್ಚಟಗಳಿಂದ ದೂರವಿದ್ದು ಸಂಸ್ಕಾರಯುತ ಜೀವನ ನಡೆಸುವಂತೆ ಸಂಪನ್ಮೂಲ ವ್ಯಕ್ತಿ ಉಪನ್ಯಾಸಕ ಲಕ್ಷ್ಮಿಕಾಂತ್ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಟ್ಟದಪುರ ವತಿಯಿಂದ ಬೆಟ್ಟದಪುರ ಪ್ರಥಮದರ್ಜೆ ಕಾಲೇಜು ಹಾಗೂ ಭುವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಹದಿಹರಿಯದ ವಯಸ್ಸಿನಲ್ಲಿ ಸ್ನೇಹಿತರ ಸಹವಾಸ ಹಾಗೂ ಸಮೂಹ ಮಾಧ್ಯಮಗಳ ಪ್ರಭಾವದಿಂದ ಕೆಟ್ಟ ಹವ್ಯಾಸಗಳಿಗೆ ಬಲಿಯಾಗಿ ಮಾರಕ ಕಾಯಿಲೆಗಳಿಂದ ಸಾವನ್ನಪ್ಪುತ್ತಿರುವುದು ದುರಂತದ ವಿಷಯವಾಗಿದೆ, ಕೆಟ್ಟ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳುವುದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗಿ ಅತ್ಯಾಚಾರ ಕೊಲೆ ದರೋಡೆ ಅಂತ ಪ್ರಕರಣಗಳು ಹೆಚ್ಚುತ್ತಿದ್ದು ಇದರಲ್ಲಿ ಯುವ ಪೀಳಿಗೆ ಹೆಚ್ಚು ಪಾಲುದಾರರಾಗಿರುವುದು ವಿಷಾಧಕರ. ದೇಶದ ಅಭಿವೃದ್ಧಿಯಲ್ಲಿ ಯುವ ಪೀಳಿಗೆ ಪಾತ್ರ ಅಪಾರವಾಗಿದ್ದು ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳುವ ಮೂಲಕ ಪೋಷಕರು ತಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಂಡು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬದುಕುವಂತೆ ಕರೆ ನೀಡಿದರು.

ಬೆಟ್ಟದಪುರ ವಲಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್ ಅವರು ಮಾತನಾಡಿ ಶಾಲಾ ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಈ ಸಂದರ್ಭ ಬೆಟ್ಟದಪುರ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಜಗದೀಶ್, ಉಪನ್ಯಾಸಕಿ ರೂಪ, ಭುವನಹಳ್ಳಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಾದ ತಿಪ್ಪೇಸ್ವಾಮಿ, ನರಸಿಂಹಮೂರ್ತಿ, ದಿನೇಶ್, ಸಂಸ್ಥೆಯ ಜ್ಞಾನ ವಿಕಾಸ ಸಮಾನ್ವಯಧಿಕಾರಿ ಮಮಿತಾ, ವಲಯ ಮೇಲ್ವಿಚಾರಕಿ ಶ್ರೀಮತಿ, ಸೇವಾ ಪ್ರತಿನಿಧಿಗಳಾದ ರೇಖಾ, ಪದ್ಮ, ಶೀಲಾ, ರುಕ್ಮಿಣಿ ಇದ್ದರು.