ಬೆಂಗಳೂರು: ಹುಕ್ಕಾ ಬಾರ್ ಸೇರಿದಂತೆ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನು ನಿಷೇಧಿಸಲು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಇಂದು ಕ್ರೀಡಾ ಸಚಿವ ನಾಗೇಂದ್ರ ಅವರ ಜೊತೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಸ್ಥಳಗಳಲ್ಲಿ ಇತರ ತಂಬಾಕು ಉತ್ಪನ್ನಗಳ ನಿಷೇಧಿಸುವ ಬಗ್ಗೆ ಚರ್ಚಿಸಿದರು.
ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ಶಾಲೆಗಳ ಜೊತೆಗೆ, ದೇವಸ್ಥಾನಗಳು, ಆಸ್ಪತ್ರೆಗಳ ಸುತ್ತಮುತ್ತಲು ನಿಷೇಧಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ಸೂಚಿಸಿರೋದಾಗಿ ತಿಳಿಸಿದರು. ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನು ನಿಷೇಧಿಸುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಹುಕ್ಕಾ ಬಾರ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು. ಹುಕ್ಕಾ ಬಾರ್ಗಳಿಗೆ ನಿಯಂತ್ರಣ ಹೇರುವಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರು ಕೆಲವು ಸಲಹೆ ನೀಡಿದ್ದು, ಕೋಟ್ಪಾ ಕಾಯ್ದೆ ತಿದ್ದುಪಡಿಯಲ್ಲಿ ಹುಕ್ಕಾ ಬಾರ್ ಗಳಲ್ಲಿ ನಡೆಯುವ ಮಾದಕ ವಸ್ತುಗಳ ಸೇವನೆಗೆ ನಿಷೇಧ ಹೇರಲು ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಯಾವುದೇ ಶಾಲೆ, ಕಾಲೇಜು, ಆಸ್ಪತ್ರೆ, ಶಿಶುಪಾಲನಾ ಕೇಂದ್ರಗಳು, ಹೆಲ್ತ್ ಕೇರ್ ಸೆಂಟರ್, ದೇವಸ್ಥಾನಗಳು, ಮಂದಿರಿಗಳು, ಮಸೀದಿಗಳು, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ ಎಂದು ಹೇಳಿದರು. ತಂಬಾಕು ಸೇವನೆಯ ಬಳಿಕ ಯುವಕರು ಡ್ರಗ್ಸ್, ಮಾದಕ ವಸ್ತುಗಳ ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದರು. ಇದಕ್ಕೆಲ್ಲಾ ತಂಬಾಕು ಸೇವನೆಯೇ ಒಂದು ರೀತಿಯಲ್ಲಿ ಅಡಿಪಾಯ ಹಾಕಿ ಕೊಡುತ್ತಿತ್ತು. ಹೀಗಾಗಿ ಮೂಲದಲ್ಲೇ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಸಚಿವರು ಹೇಳಿದರು.