ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲ್ಯೂಎಂಎ ಆದೇಶವನ್ನು ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲ್ಯೂಎಂಎ ಆದೇಶ ಎತ್ತಿ ಹಿಡಿದಿದೆ. ಮುಂದಿನ ೧೫ ದಿನ ಸಿಡಬ್ಲ್ಯೂಎಂಎ ಆದೇಶ ಪಾಲನೆ ಮಾಡಬೇಕು ಅಂತ ಹೇಳಿರುವುದು ದುರಾದೃಷ್ಟ. ಮತ್ತೊಮ್ಮೆ ಕರ್ನಾಟಕದ ವಸ್ತು ಸ್ಥಿತಿಯನ್ನು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಬೇಕಿದೆ. ಸಿಡಬ್ಲ್ಯೂಎಂಎ ಆದೇಶ ಅಂತಿಮವಲ್ಲ. ಕೇವಲ ಕರ್ನಾಟಕದ ಡ್ಯಾಮ್ ಗಳ ನೀರಿನ ಮಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್ಗಳಲ್ಲಿನ ನೀರಿನ ಮಟ್ಟ ಲೆಕ್ಕ ಹಾಕಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೇಳುತ್ತಾರೆ. ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ. ಅದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು. ರಾಜ್ಯ ಸರ್ಕಾರ ಕೇವಲ ನಮ್ಮಲ್ಲಿ ನೀರಿಲ್ಲ ಅಂತ ಹೇಳುವುದಷ್ಟೇ ಅಲ್ಲ. ಬೆಂಗಳೂರು ಒಂದು ಅಂತಾರಾಷ್ಟ್ರೀಯ ನಗರ, ಇಲ್ಲಿ ಎಲ್ಲ ಭಾಗದ ಜನರು ಬರುತ್ತಾರೆ. ಬೆಂಗಳೂರಿಗೆ ಕುಡಿಯಲು ಪ್ರತ್ಯೇಕವಾಗಿ ನೀರು ಇಟ್ಟಿದ್ದಾರೆ. ಅದನ್ನು ಸುಪ್ರೀಂ ಕೋರ್ಟ್ ಮುಂದೆ ವಾದ ಮಾಡಬೇಕು.
ತಮಿಳುನಾಡಿಗೆ ನವೆಂಬರ್ನಲ್ಲಿ ಮತ್ತೊಂದು ಹಿಂಗಾರು ಮಳೆ ಬರುತ್ತದೆ. ಆದರೆ, ಕರ್ನಾಟಕಕ್ಕೆ ಮುಂಗಾರು ಮುಗಿಯುವ ಹಂತದಲ್ಲಿದೆ. ಇದೆಲ್ಲವನ್ನು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡಬೇಕು. ಕುಡಿಯುವ ನೀರಿಗಾದರು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಹೋರಾಟ ಮಾಡಬೇಕು. ಇದರಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ. ಈಗಾಗಲೇ ರೈತರ ಬೆಳೆ ಒಣಗಿ ಹೋಗುತ್ತಿದೆ. ರಾಜ್ಯ ಸರ್ಕಾರ ಪ್ರತಿ ಎಕರೆಗೆ ೨೫ ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.