ಹೊಸೂರು : ನೌಕರರು ನಿವೃತ್ತಿಗೊಂಡ ನಂತರ ವಿಲಾಸಿ ಜೀವನಕ್ಕೆ ಆದ್ಯತೆ ಕೊಡುವ ಬದಲು ಸಂಘ ಸ್ಥಾಪಿಸಿಕೊಂಡು ಪ್ರತಿಭಾ ಪುರಸ್ಕಾರ ಸೇರಿದಂತೆ ಇತರ ಸಮಾಜ ಮುಖಿ ಕೆಲಸ ಮಾಡುತ್ತಿದ್ದಾರೆ ಅದಕ್ಕಾಗಿ ಸಂಘಟಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಪರಿಶಿಷ್ಟ ಜನಾಂಗದ ನಿವೃತ್ತ ನೌಕರರ ಅಂಬವಾಡಿ ಭೀಮರಾವ್ ಟ್ರಸ್ಟ್ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದುಳಿದ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೌಕರರು ಮತ್ತು ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ರವರ ಆಶಯದಂತೆ ನಡೆದುಕೊಳ್ಳಬೇಕು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ರಸ್ಟ್ ನ ಪದಾಧಿಕಾರಿಗಳು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದ ಶಾಸಕರು ಇಂತಹಾ ಉತ್ತಮ ಕೆಲಸಕ್ಕೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.
ಸಂಘಟನೆ, ಹೋರಾಟ ಮತ್ತು ಶಿಕ್ಷಣದಲ್ಲಿ ಪ್ರಗತಿ ಸಾಧಿಸಿದಾಗ ಮಾತ್ರ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಇದನ್ನು ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದ ಶಾಸಕರು ಎಸ್ಎಸ್ಎಲ್ಸಿ ಮತ್ತು ಪಿಯುಸಿಯ ಮಕ್ಕಳು ಓದಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳು ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟವಾಗಿದ್ದು ಮಕ್ಕಳು ದೊಡ್ಡ ಕನಸನ್ನು ಕಾಣಬೇಕು, ಅದನ್ನು ಸಾಧಿಸಲು ಉತ್ತಮ ಪರಿಶ್ರಮ ಹಾಕಬೇಕು ಎಂದು ಕಿವಿ ಮಾತು ಹೇಳಿದ ಶಾಸಕ ಡಿ.ರವಿಶಂಕರ್ ನನ್ನ ಅಧಿಕಾರವಧಿಯಲ್ಲಿ ಶಿಕ್ಷಣಕ್ಕೆ ಒತ್ತುಕೊಟ್ಟು ಕೆಲಸ ಮಾಡಲು ನಿರ್ದರಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಹಶೀಲ್ದಾರ್ ಸಿ.ಎಸ್.ಪೂರ್ಣಿಮ, ಬಿಇಒ ಆರ್.ಕೃಷ್ಣಪ್ಪ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಎಎಸ್ಐ ಗಿರೀಶ್, ಸಂಘಟನೆಯ ಪದಾಧಿಕಾರಿಗಳಾದ ಮರಿಯಯ್ಯ, ಮಂಜುರಾಜ್, ಸಿದ್ದಯ್ಯ, ಜವರಯ್ಯ, ಶ್ರೀನಿವಾಸ್, ಮಂಜುನಾಥ್, ಲಿಂಗರಾಜು, ಸಣ್ಣಯ್ಯ, ನಾಗರಾಜು, ಕಂಠಿಕುಮಾರ್, ಮುಂತಾದವರು ಹಾಜರಿದ್ದರು.