ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿಂದು ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಬಂಗಾರಪೇಟೆ ಶಾಸಕ ಎಸ್. ನಾರಾಯಣಸ್ವಾಮಿ ನಡುವೆ ವಾಗ್ವಾದ ನಡೆಯಿತು. ಕಾರ್ಯಕ್ರಮದ ವೇದಿಕೆ ಮೇಲೆಯೇ ಜನಪ್ರತಿನಿಧಿಗಳು ಏಕವಚನದಲ್ಲೇ ಪರಸ್ಪರ ನಿಂದಿಸಿಕೊಂಡರು.
ಭೂಗಳ್ಳರನ್ನು ಪಕ್ಕದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ಮಾಡುತ್ತಿರುವುದು ಸರಿಯಲ್ಲ ಎಂದು ಎಸ್. ಮುನಿಸ್ವಾಮಿ ಏರುಧ್ವನಿಯಲ್ಲಿ ಮಾತನಾಡಿದರು. ಇದಕ್ಕೆ ನಾರಾಯಣಸ್ವಾಮಿ ಕೆರಳಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಇನ್ನೇನು ಕೈ ಕೈ ಮಿಲಾಯಿಸುವ ಹಂತಕ್ಕೆ ಜನಪ್ರತಿನಿಧಿಗಳ ಜಗಳ ತಲುಪಿತು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಕೂಡಾ ವೇದಿಕೆ ಮೇಲಿದ್ದರು. ಸಚಿವರು ಇಬ್ಬರನ್ನೂ ಸಮಾಧಾನಪಡಿಸಿಲು ಮುಂದಾದರು. ಪೊಲೀಸರು ಮಧ್ಯಪ್ರವೇಶಿಸಿ ಎಸ್. ಮುನಿಸ್ವಾಮಿ ಅವರನ್ನು ಹೊರಗೆ ಕರೆದುಕೊಂಡು ಹೋದರು.