ಕೊಡಗು: ತಲಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ ಆರಂಭವಾಗಿದ್ದು, ಕಳೆದ ತಿಂಗಳ ೨೭ರಿಂದಲೇ ತಲಕಾವೇರಿ ಭಾಗಮಂಡಲದಲ್ಲಿ ವಿಶೇಷ ಪೂಜಾಕೈಂಕರ್ಯಗಳು ಆರಂಭವಾಗಿವೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ತಲಕಾವೇರಿ ಭಾಗಂಡಲಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ಮೊದಲು ಭಾಗಮಂಡಲದ ಬಂಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಭಗಂಡೇಶ್ವರ ದೇವಾಲಯದಲ್ಲಿ ನಂದಾ ದೀಪ ಬೆಳಗುವ ಹಾಗೂ ಅಕ್ಷಯ ಪಾತ್ರೆಗೆ ಅಕ್ಕಿ ಹಾಕುವ ಸಾಂಪ್ರದಾಯಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ಈ ನಂದಾ ದೀಪ ಇಂದಿನಿಂದ ಮುಂದಿನ ಒಂದು ತಿಂಗಳವರೆಗೆ ಉರಿಯುತ್ತಿರುತ್ತದೆ. ಅಂದ್ರೆ ಕಿರು ಸಂಕ್ರಮಣದವರೆಗೂ ದೀಪ ಉರಿಸಲಾಗುತ್ತೆ. ಜಿಲ್ಲಾಡಳಿತ ಹಾಗೂ ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಸಲಾಗುತ್ತದೆ ಎಂದು ಕೊಡಗು ಸಚಿವ ಬೋಸರಾಜು ತಿಳಿಸಿದರು.
ಸಾಂಸ್ಕೃತಿಕ ಗೀತಗಾಯನ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ, ಭಕ್ತಾಧಿಗಳ ಅನುಕೂಲಕ್ಕಾಗಿ ಬ್ಯಾರಿಕೇಡ್ ನಿರ್ಮಾಣ, ಅಗತ್ಯ ವ್ಯವಸ್ಥೆಗ ಸೇರಿದಂತೆ ಮತ್ತಿತರ ಸಿದ್ಧತೆಗಳ ಬಗ್ಗೆ ಸಚಿವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿದರು. ”ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಒಂದು ತಿಂಗಳಿನಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತಾಧಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ವಾಹನ ನಿಲುಗಡೆ, ಸಂಚಾರಕ್ಕೆ ಪೂರಕವಾಗಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ” ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ೨- ಡಿವೈಎಸ್ಪಿ, ೯- ಪೊಲೀಸ್ ಇನ್ಸ್ಪೆಕ್ಟರ್, ೧೫- ಸಬ್ ಇನ್ಸ್ಪೆಕ್ಟರ್, ೩೦- ಸಹಾಯಕ ಸಬ್ ಇನ್ಸ್ಪೆಕ್ಟರ್, ೩೫೦ ಹೆಡ್ಕಾನ್ಸ್ಟೇಬಲ್ ಹಾಗೂ ಅಗತ್ಯ ಪೊಲೀಸ್ ಸಿಬ್ಬಂದಿಗಳ ಜೊತೆಗೆ ಗೃಹ ರಕ್ಷಕ ದಳದವರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾಹಿತಿ ನೀಡಿದ್ದಾರೆ.