ಮದ್ದೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಹಾಗೂ ಸಮಾಜಮುಖಿ ಚಿಂತಕರಾದ ಕೆ.ಟಿ. ಚಂದು ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ಮದ್ದೂರಿಗೆ ಹೆಮ್ಮೆ ತರುವ ವಿಚಾರವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಅವರು ಹೇಳಿದರು.
ತಾಲೂಕಿನ ಚನ್ನೇಗೌಡನದೊಡ್ಡಿ ಗ್ರಾಮದ ಕೆ.ಟಿ. ಚಂದು ಅವರ ನಿವಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಅವರು ಮಾತನಾಡಿದರು.
ಕೆ.ಟಿ. ಚಂದು ಅವರು ಶಿಕ್ಷಣ, ಸಾಹಿತ್ಯ, ಸಮಾಜಸೇವೆ, ಸಂಘಟನೆ, ಸಹಕಾರ ಕ್ಷೇತ್ರ ಸೇರಿದಂತೆ ಮದ್ದೂರು ತಾಲೂಕಿಗೆ ಅಪಾರ ಕೊಡುಗೆ ನೀಡಿದ್ದಾರೆ. ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಇಂಥವರಿಗೆ ರಾಜ್ಯ ಸರ್ಕಾರ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿರುವುದು ಪ್ರಶಸ್ತಿಗೂ ಮೌಲ್ಯ ಬಂದಂತಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಟಿ. ಚಂದು ಅವರನ್ನು ಅಭೂತಪೂರ್ವವಾಗಿ ಅಭಿನಂದಿಸಲಾಗುವುದು ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ವಳಗೆರೆಹಳ್ಳಿ ವಿ.ಸಿ. ಉಮಾಶಂಕರ್ ಅವರು ಮಾತನಾಡಿ, ಸಮಾಜದ ಪ್ರಗತಿಯಲ್ಲಿ ಕೆ.ಟಿ. ಚಂದು ಅವರ ಪಾತ್ರ ಅಪಾರವಾಗಿದ್ದು, ನಾಡು ನುಡಿಗೆ ಅವರ ಕೊಡುಗೆ ನೀಡಿದ್ದಾರೆ. ಸಮಾಜದ ಬಗ್ಗೆ ,ಹಾಗೂ ಶಿಕ್ಷಣ ಕ್ಷೇತ್ರದ ಬಗ್ಗೆ ಚಿಂತನಶೀಲರಾಗುವ ಕೆ.ಟಿ. ಚಂದು ಅವರು ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ರಾಜ್ಯ ಸರ್ಕಾರ ಇಂತಹ ಸತ್ವಪೂರ್ಣ ಹಾಗೂ ಸಮಾಜಮುಖಿ ಚಿಂತಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಗೌರವಾಧ್ಯಕ್ಷ ವಿ.ಎಚ್. ಶಿವಲಿಂಗಯ್ಯ, ಉಪಾಧ್ಯಕ್ಷ ತಿಪ್ಪೂರು ರಾಜೇಶ್, ಪತ್ರಕರ್ತರಾದ ಅಂಬರಹಳ್ಳಿ ಸ್ವಾಮಿ, ಬಿ.ಎ. ಮಧುಕುಮಾರ ಮುಖಂಡರಾದ ಶ್ರೀನಿವಾಸು ಮಹಾಲಿಂಗ ಕೆ.ಜಿ. ಉಮೇಶ್, ಸಕ್ಕರೆ ನಾಗರಾಜು, ಮಹೇಂದ್ರ, ರವಿ, ಜಗದೀಶ್, ಪ್ರಾಂಶುಪಾಲ ಶಿವಕುಮಾರ್ ಅಪೂರ್ವ ಚಂದು ಸೇರಿದಂತೆ ಇತರರು ಇದ್ದರು.