ಕೆ.ಆರ್.ನಗರ: ಗ್ರಾಮದ ಮಹಿಳೆಯರು ಮತ್ತು ಸ್ವ-ಸಹಾಯ ಸಂಘದ ಸದಸ್ಯರುಗಳು ಸಭೆ, ಸಮಾರಂಭ ನಡೆಸಲು ಗೌಡೇನಹಳ್ಳಿಯಲ್ಲಿ ಸುಸಜ್ಜಿತವಾದ ಮಹಿಳಾ ಸಮುದಾಯ ಭವನ ನಿರ್ಮಾಣ ಮಾಡಿಸಿಕೊಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ತಾಲೂಕಿನ ಗೌಡೇನಹಳ್ಳಿ ಗ್ರಾಮದಲ್ಲಿ ನಡೆದ ಕೃತಜ್ಞತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ರಾಮದ ಬಸವೇಶ್ವರ ದೇವಾಲಯದ ದುರಸ್ಥಿಗಾಗಿ ಶೀಘ್ರದಲ್ಲೇ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುತ್ತದೆ ಇದರ ಜತೆಗೆ ಗ್ರಾಮದ ಮುಖ್ಯ ರಸ್ತೆಯನ್ನು ಅಭಿವೃದ್ದಿ ಪಡಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು.
ಆಶ್ರಯ ಯೋಜನೆಯಡಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಕಷ್ಟು ಮಂದಿ ಅರ್ಜಿ ಸಲ್ಲಿಸಿದ್ದು ಅರ್ಹ ಫಲಾನುಭವಿಗಳಿಗೆ ಮನೆ ನೀಡಲು ಬದ್ದನಾಗಿದ್ದು ಸಿದ್ದಾಪುರ ಗ್ರಾಮ ಪಂಚಾಯಿತಿಗೆ ಹೆಚ್ಚುವರಿಯಾಗಿ ಮನೆ ಮಂಜೂರು ಮಾಡುವಂತೆ ವಸತಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ ಶಾಸಕರು ಪಂಚಾಯಿತಿ ಸದಸ್ಯರು ಮನೆ ವಿತರಿಸುವಾಗ ಯಾವುದೇ ಕಾರಣಕ್ಕೂ ಫಲಾನುಭವಿಗಳಿಂದ ಹಣ ಪಡೆಯಬಾರದು ಎಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಬಾಕ್ಸ್ ಚರಂಡಿ ಮತ್ತು ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿಸುವುದರ ಜತೆಗೆ ಶುದ್ದ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಪಿಡಿಒ ಅವರಿಗೆ ಸೂಚಿಸಿದ ಶಾಸಕ ಡಿ.ರವಿಶಂಕರ್ ಗ್ರಾಮಸ್ಥರು ಸಾಕಷ್ಟು ಸಮಸ್ಯೆಗಳ ಪಟ್ಟಿಯನ್ನು ನೀಡಿದ್ದು ಹಂತ ಹಂತವಾಗಿ ಎಲ್ಲಾ ಕೆಲಸಗಳನ್ನು ಮಾಡಿಸಿಕೊಡಲಾಗುತ್ತದೆ ಎಂದು ಭರವಸೆ ನೀಡಿದರು.
ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗೇಶ್ಕುಮಾರ್, ಸದಸ್ಯ ಕೇಬಲ್ಮಹದೇವ್, ಮಾಜಿ ಅಧ್ಯಕ್ಷ ವಸಂತಮoಜುನಾಥ್, ಮಾಜಿ ಉಪಾಧ್ಯಕ್ಷ ಕಳಸೇಗೌಡ, ತಾ.ಪಂ. ಮಾಜಿ ಸದಸ್ಯ ಚಿಕ್ಕೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್ಜಾಬೀರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ವಕೀಲ ಕೆ.ಸಿ.ಹರೀಶ್, ಮುಖಂಡರಾದ ಮಹದೇವ್, ಕಾಳೇಗೌಡ, ಕಂಚುಗಾರಕೊಪ್ಪಲುಸ್ವಾಮಿ, ಕೆಸ್ತೂರುಜಗದೀಶ್ ಮತ್ತಿತರರು ಹಾಜರಿದ್ದರು.