ರಾಮನಗರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೪ರ ಸಂಬಂಧ ವಿಶೇಷ ನೋಂದಣಿ ಅಭಿಯಾನವನ್ನು ಡಿಸೆಂಬರ್ ೨ ಮತ್ತು ೩ರಂದು ಸ್ಥಳೀಯ ಮತಗಟ್ಟೆ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಈ ಅಭಿಯಾನದಲ್ಲಿ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.
ಅವರು ಇಂದು ರಾಮನಗರದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಮನಗರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವದ ಕುರಿತು ಆಯೋಜಿಸಲಾಗಿದ್ದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೪ರ ಸಂಬಂಧ ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದ್ದು, ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲಿಸಿ ಡಿ. ೯ ರವರೆಗೆ ನಮೂನೆ ೬, ೭, ೬ಬಿ ಮತ್ತು ನಮೂನೆ ೮ರ ಬಗ್ಗೆ ಯುವ ಮತದಾರರಿಗೆ ವಿಎಚ್ಎ ಆಯಪ್ ಕುರಿತು ಮತ್ತು ಮತದಾನದ ಮಹತ್ವದ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ ಮಾಡಬಯಸುವವರು ವೋಟರ್ ಹೆಲ್ಪ್ಲೈನ್ ಡೌನ್ಲೋಡ್ ಮಾಡಿಕೊಂಡು ಅಥವಾ https://voters.eci.gov.in ವೆಬ್ ಸೈಟ್ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಜಾಥಾ: ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಿಂದ ಮಾಗಡಿ ರಸ್ತೆ ಮೂಲಕ ಐಜೂರು ವೃತ್ತದ ವರೆಗೆ ವಿದ್ಯಾರ್ಥಿಗಳ ಮೂಲಕ ಮಾನವ ಸರಪಳಿ ನಿರ್ಮಿಸಿ ಅಭಿಯಾನದ ಕುರಿತು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ, ತಾಲ್ಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಪ್ರದೀಪ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗೋವಿಂದರಾಜು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.