ರಾಮನಗರ: ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾನವ ತನ್ನ ಮನಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟುಕೊಳ್ಳಬೇಕು. ಹೃದಯವಂತಿಕೆ ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎನ್ನುವುದನ್ನು ತಮ್ಮ ಕಾವ್ಯಗಳ ಮೂಲಕ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದರು ಎಂದು ತಿಳಿಸಿದರು. ಶ್ರೀರಾಮಾಯಣ ದರ್ಶನಂ ಮಹಾಕಾವ್ಯ ರಚಿಸಿ, ರಾಜ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟಿದ್ದಾರೆ. ಅವರಿಗೆ ಯುಗದ ಕವಿ ಹಾಗೂ ಜಗದ ಕವಿ ಎಂಬ ಬಿರುದುಗಳಿವೆ. ವಿಭಿನ್ನ ಆಯಾಮಗಳ ಮೂಲಕ ವಿಶ್ವ ಮಾನವ ಸಂದೇಶವನ್ನು ವಿಶ್ವಕ್ಕೆ ಪರಿಚಯಿಸಿದ ಮೊದಲ ಯುಗದ ಕವಿ ಎಂದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್ ಅವರು ಮಾತನಾಡಿ, ಕುವೆಂಪು ಅವರು ನಾಡಗೀತೆಯನ್ನು ರಚಿಸಿ, ಸಾಮರಸ್ಯವನ್ನು ಸಾರಿದ್ದಾರೆ. ಮುಂದಿನ ಪೀಳಿಗೆಯವರು ಸಹ ಕುವೆಂಪು ಅವರನ್ನು ನೆನಪಿಸಿಕೊಳ್ಳುವಂತಹ ಕೃತಿಗಳನ್ನು ಅವರು ಬರೆದಿದ್ದಾರೆ. ಎಲ್ಲಾ ಸಾಹಿತ್ಯದ ಅನುಭವಗಳನ್ನು ಕೊಟ್ಟಂತಹ ಮಾಹನ್ ವ್ಯಕ್ತಿ ಕುವೆಂಪು ಅವರು ಎಂದರು. ಕುವೆಂಪು ಅವರ ಸಂದೇಶ ಸಣ್ಣದಲ್ಲ, ಯಾರು ದೊಡ್ಡವರಲ್ಲ, ಯಾರು ಚಿಕ್ಕವರಲ್ಲ ಎಲ್ಲರೂ ಸಮಾನರು ಎಂಬ ಭಾವನೆ ಕುವೆಂಪು ಅವರದಾಗಿತ್ತು ಹಾಗೂ ಅವರನ್ನು ಮೂರು ಬಾರಿ ಸಂದರ್ಶಿಸಲು ಅವಕಾಶ ಸಿಕ್ಕಿತ್ತು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಹಿರಿಯ ಜಾನಪದ ವಿದ್ವಾಂಸರಾದ ಡಾ. ಚೆಕ್ಕೆರೆ ಶಿವಶಂಕರ್, ಜಾನಪದ ವಿದ್ವಾಂಸರಾದ ಡಾ. ಬೈರೇಗೌಡ, ಶಿವನಂಜಯ್ಯ, ಚಿಕ್ಕ ಮರಿಗೌಡ ಅವರಿಗೆ ಸನ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಬಾಬು ಅವರು ಸಭೀಕರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಬಿ.ಟಿ ನಾಗೇಶ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾಹಿತಿಗಳು, ಕನ್ನಡ ಪರ ಹೋರಾಟಗಾರರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.