ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ನಗರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಕುಂದು ಕೊರತೆಗಳನ್ನು ವಿಚಾರಿಸಿ, ಸಮಸ್ಯೆ ಅಹವಾಲುಗಳನ್ನು ಕೇಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರಕ್ಕೆ ಸೂಚನೆ ನೀಡಿದರು.
ರಸ್ತೆ ಅಗಲೀಕರಣದಿಂದ ಇನ್ನು ಪರಿಹಾರ ಲಭಿಸದಿರುವ ಹಾಗೂ ನಿವೇಶನ ಕೂಡ ನೀಡದಿರುವ ಬಗ್ಗೆ ಸ್ಥಳೀಯರೊಬ್ಬರು ದೂರು ಸಲ್ಲಿಸಿದರು. ಜೀತ ವಿಮುಕ್ತರಿಗೆ ಪರಿಹಾರ ಸೌಲಭ್ಯಗಳು ನೀಡಬೇಕು ಎಂಬ ಮನವಿ ಮತ್ತೋರ್ವರಿಂದ ಸಲ್ಲಿಕೆಯಾಯಿತು. ಗಂಗಾ ಕಲ್ಯಾಣ ಸೌಲಭ್ಯ ಇನ್ನೂ ಸಿಕ್ಕಿಲ್ಲವೆಂದು ಕಾಮಗೆರೆ ನಿವಾಸಿಯೊಬ್ಬರು ಮನವಿ ಮಾಡಿದರು. ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಕುರಿತು ಮನವಿ ನೀಡಿದರು. ಇನ್ನಿತರ ಸಮಸ್ಯೆಗಳನ್ನು ಸಾರ್ವಜನಿಕರು ಸಚಿವರ ಮುಂದೆ ನಿವೇದಿಸಿಕೊಂಡರು.
ನಗರಸಭೆಯಲ್ಲಿ ಇ-ಸ್ವತ್ತು ಪಡೆಯಲು ಸಾಧ್ಯವಾಗುತ್ತಿಲ್ಲವೆಂಬ ಸಾರ್ವಜನಿಕ ದೂರು ವ್ಯಾಪಕವಾಗಿದೆ. ಈ ಬಗ್ಗೆ ಗಮನಹರಿಸಬೇಕು ಎಂದು ಗಮನಸೆಳೆದ ಪ್ರಸ್ತಾವಕ್ಕೆ ಉತ್ತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯನ್ನು ಈ ತಿಂಗಳಿನಲ್ಲಿ ನಡೆಸಲಾಗುವುದು. ಈ ಹಿಂದೆ ನಡೆದ ಜನಸಂಪರ್ಕ ಸಭೆಯಲ್ಲಿ ಸಲ್ಲಿಕೆಯಾದ ದೂರುಗಳ ಇತ್ಯರ್ಥಕ್ಕೆ ಕ್ರಮವಹಿಸಲಾಗಿದೆ. ಬಾಕಿ ಇರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಿ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ. ಕಂಟ್ರಾಕ್ಟರ್, ಇನ್ನಿತರರು ಉಪಸ್ಥಿತರಿದ್ದರು.