ಬಳ್ಳಾರಿ: ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲಿ ಸಮಾನತೆ ಇದೆ, ಸರಕಾರದ ನಾನಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅವುಗಳನ್ನು ಬಳಸಿಕೊಂಡು ಸದೃಢವಾಗಿ ಮುನ್ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಮಂಗಳವಾರ ನಡೆದ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ಚತುಷ್ಚಕ್ರ ವಾಹನ ಚಾಲನೆ ತರಬೇತಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಾಹನಕ್ಕೆ ಚಾಲಕರಾಗಿ ಸ್ವಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, ಮಹಿಳೆಯರು ಧೈರ್ಯದಿಂದ ವಾಹನ ಚಲಾಯಿಸುವುದನ್ನು ಕಲಿಯಬೇಕು. ಉತ್ತಮ ತರಬೇತಿ ಪಡೆದು ಸ್ವತಂತ್ರ ಜೀವನ ನಡೆಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಪ್ರಮೋದ್. ಪಿ.ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಚೆನ್ನಾಗಿ ತರಬೇತಿ ಪಡೆದಿರಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಚಾಲನಾ ತರಬೇತಿ ಪಡೆಯದ ಮಹಿಳೆಯರಿಗೆ ತರಬೇತಿ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎಜಿಎಂ ಮತ್ತು ಡಿ. ವಿ.ಪಿ.ಆರ್.ಮುರಳೀಕೃಷ್ಣ, ಖಾಗ್ರಾ ಉಪನಿರ್ದೇಶಕ ಸಾದಿಕ್ ಉಲ್ಲಾ, ತಾಪಂ ಇಒ ಮಡಿಗಿ ಬಸಪ್ಪ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಹಿರಿಯ ವ್ಯವಸ್ಥಾಪಕ ಶರಣಬಸವ ರೆಡ್ಡಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಎರಿಮನಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ ಉಪನ್ಯಾಸಕ ಸೇರಿದಂತೆ ಸಿದ್ದಲಿಂಗಮ್ಮ, ಸಂತೋಷಕುಮಾರ ಹಾಜರಿದ್ದರು ತರಬೇತಿಯಲ್ಲಿ 30 ಶಿಬಿರಾರ್ಥಿಗಳು ಭಾಗವಹಿಸಿದ್ದರು.
