ಶಿಮ್ಲಾ: ಅನಿರೀಕ್ಷಿತ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗುತ್ತಿರುವ ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಸಭಾಧ್ಯಕ್ಷ ಕುಲದೀಪ್ ಸಿಂಗ್ ಅವರು, ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಸೇರಿ ೧೫ ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ.
ಬಳಿಕ, ಸದನದ ಕಲಾಪವನ್ನು ಮುಂದೂಡಿದ್ದಾರೆ. ಸದನದಲ್ಲಿ ದುರ್ವರ್ತನೆ ಮತ್ತು ಘೋಷಣೆ ಕೂಗಿದ್ದಕ್ಕಾಗಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಅನ್ನು ಅಂಗೀಕರಿಸಲು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಬಹುದು ಎಂದು ನಾವು ಆತಂಕಗೊಂಡಿದ್ದೇವೆ’ಎಂದು ಠಾಕೂರ್ ಬೆಳಿಗ್ಗೆ ಸುದ್ದಿಗಾರರಿಗೆ ತಿಳಿಸಿದ್ದರು.
ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ರಾಜ್ಯಸಭೆ ಚುನಾವಣೆಯಲ್ಲಿ ಸಾಬೀತಾಗಿದೆ. ಹಾಗಾಗಿ, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆಗೆ ಒತ್ತಾಯಿಸಿದ್ದರು. ಹಿಮಾಚಲ ಪ್ರದೇಶ ವಿಧಾನಸಭೆಯಿಂದ ರಾಜ್ಯಸಭೆಯ ಏಕೈಕ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿತ್ತು. ಪಕ್ಷದ ಅತೃಪ್ತ ಶಾಸಕರು ಅಡ್ಡ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಕಾರಣರಾಗಿದ್ದರು. ಇಲ್ಲಿ ಕಾಂಗ್ರೆಸ್ನ ಅಭಿಷೇಕ್ ಮನು ಸಿಂಘ್ವಿ ಮತ್ತು ಬಿಜೆಪಿಯ ಹರ್ಷ ಮಹಾಜನ್ ನಡುವೆ ಪೈಪೋಟಿ ಇತ್ತು. ಇಬ್ಬರೂ ೩೪,೩೪ರಲ್ಲಿ ಸಮಬಲ ಸಾಧಿಸಿದರು. ಚೀಟಿ ಎತ್ತಿದಾಗ ಅದೃಷ್ಟ ಮಹಾಜನ್ಗೆ ಒಲಿದಿತ್ತು.