ರಾಮನಗರ: ಪ್ರತಿವರ್ಷದಂತೆ ಜಿಲ್ಲಾ ಮಟ್ಟದ ಕ್ರೀಡಾಕೂಟ ರಾಮನಗರದಲ್ಲಿ ನಡೆಯುತ್ತಿದ್ದು, ಸರ್ಕಾರ ವರ್ಷಕ್ಕೊಮ್ಮೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಸರ್ಕಾರಿ ನೌಕರರ ಕೆಲಸದ ಒತ್ತಡದ ನಿವಾರಣೆಗೆ ಸಹಕಾರಿಯಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೆ. ಸತೀಶ್ ಅವರು ತಿಳಿಸಿದರು.
ಅವರು ಇಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಮನಗರ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನಲ್ಲಿ ನಡೆದ ಸಮ್ಮೇಳನಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಮಾಡಿದ್ದೀರಿ, ಲೋಕಸಭಾ ಚುನಾವಣೆಗೂ ಮುನ್ನಾ ೭ನೇ ವೇತನ ಆಯೋಗದ ನಮ್ಮ ಬೇಡಿಕೆ ಈಡೇರಲಿದೆ. ಸರ್ಕಾರಿ ನೌಕರರನ್ನು ಬೀದಿಗಿಳಿಸದೆ ಸರ್ಕಾರ ನೌಕರರ ಬೇಡಿಕೆಗಳಾದ ೭ನೇ ವೇತನ, ಓಪಿಎಸ್ ಹಾಗೂ ಆರೋಗ್ಯ ಸಂಜೀವಿನಿ ಕಾರ್ಯಕ್ರಮ ಗಳನ್ನು ಅನುನ ಮಾಡಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ತಾಲೂಕು ಮಟ್ಟದಲ್ಲಿ ಆಯ್ಕೆಯಾಗಿ ಜಿಲ್ಲಾ ಮಟ್ಟಕ್ಕೆ ಆಗಮಿಸಿರುವ ಕ್ರೀಡಾಪಟುಗಳು ಎಲ್ಲರೂ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಕಿವಿ ಮಾತು ಹೇಳಿ ಶುಭ ಕೋರಿದರು. ರಾಮನಗರ ನಗರಸಭೆ ಅಧ್ಯಕ್ಷೆ ವಿಜಯಕುಮಾರಿ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕ್ರೀಡಾಪಟುಗಳಿಗೆ ಶುಭ ಕೋರಿ ರಾಜ್ಯಮಟ್ಟದಲ್ಲಿ ವಿಜೇತರಾಗಿ ರಾಮನಗರ ಜಿಲ್ಲೆಗೆ ಒಳ್ಳೆಯ ಹೆಸರನ್ನು ತನ್ನಿ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಕಾಂತರಾಜು, ಪ್ರಧಾನ ಕಾರ್ಯದರ್ಶಿ ಶಿವಸ್ವಾಮಿ, ಖಜಾಂಚಿ ರಾಜಶೇಖರ್, ಕಾರ್ಯಧ್ಯಕ್ಷರಾದ ರಾಜೇಗೌಡ, ರಮೇಶ್, ಪ್ರಚಾರ ಸಮಿತಿ ಅಧ್ಯಕ್ಷ ಸತೀಶ್ ಪಾದ್ರಳ್ಳಿ, ತಾಲೂಕು ಅಧ್ಯಕ್ಷರುಗಳಾದ ಚಂದ್ರಶೇಖರ್, ಪ್ರಕಾಶ್, ಶಿವಲಿಂಗೇಗೌಡ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ, ಟಿಪಿಓಗಳಾದ ನೀಲಕಂಠಸ್ವಾಮಿ, ಭಾರತಿ, ಸತೀಶ್, ಸಾವಿತ್ರಿಬಾಯಿ ಪುಲೆ ಸಂಘದ ಜಿಲ್ಲಾಧ್ಯಕ್ಷೆ ರತ್ನಮ್ಮ, ಸಂಘದ ರೇಣುಕಯ್ಯ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಇದ್ದರು.