ಚಾಮರಾಜನಗರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇದೇ ಮಾರ್ಚ್ 12ರಂದು ನಗರದಲ್ಲಿ ಆಯೋಜನೆ ಯಾಗಿರುವ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದರು.
ಶಾಸಕರು ಹಾಗೂ ಎಂ.ಎಸ್.ಐ.ಎಲ್ ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ತಹಶೀಲ್ದಾರ್ ಐ.ಈ. ಬಸವರಾಜು, ಇನ್ನಿತರ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲಿರುವ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಿರುವ ಸಿದ್ದತೆಗಳ ಕುರಿತು ಸೂಚನೆ ನೀಡಿದರು.
ಮುಖ್ಯಮಂತ್ರಿಯವರ ನೇತೃತ್ವದಲ್ಲಿ ನಡೆಯಲಿರುವ ಫಲಾನುಭವಿಗಳ ಸಮಾವೇಶಕ್ಕೆ ಅಳವಡಿಸಬೇಕಿರುವ ಬೃಹತ್ ವೇದಿಕೆ, ಶಾಮಿಯಾನ, ಕುಡಿಯುವ ನೀರು, ಆಸನಗಳ ವ್ಯವಸ್ಥೆ ಬಗ್ಗೆ ಅಗತ್ಯ ಸೂಚನೆ ನೀಡಿದರು. ವಾಹನಗಳ ನಿಲುಗಡೆ, ಇನ್ನಿತರ ವ್ಯವಸ್ಥೆಗಳ ಸಂಬಂಧ ಪರಿಶೀಲಿಸಿದರು. ವಾಹನಗಳ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ, ಹೆಚ್ಚು ಜನರು ಸಮಾವೇಶಕ್ಕೆ ಬರಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಕಲ್ಪಿಸಬೇಕಿರುವ ಇತರೆ ಸೌಲಭ್ಯಗಳನ್ನು ಒದಗಿಸುವ ಕುರಿತು ಶಾಸಕರು ವೀಕ್ಷಿಸಿದರು.
ಡಿವೈಎಸ್ಪಿ ಲಕ್ಷ್ಮಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಜಿಲ್ಲಾ ನಗರಾಭಿವೃದ್ದಿ ಕೋಶದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ನಗರಸಭೆ ಎಂಜಿನಿಯರ್ ನಟರಾಜು, ಆಹಾರ ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಸವಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಇನ್ನಿತರ ಅಧಿಕಾರಿಗಳು ಇದ್ದರು.
