ದಾವಣಗೆರೆ: ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ನಿಷೇಧ ಮತ್ತು ಬಾಲ ನ್ಯಾಯ ಕಾಯಿದೆ ಸೇರಿದಂತೆ ಜನರಿಗಾಗಿ ರೂಪಿಸಲಾದ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಇಲಾಖೆಗಳು ಹೆಚ್ಚು ಜಾಗೃತಿ ಮೂಡಿಸಲು ಮುಂದಾಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ.ಎನ್.ಹೆಗಡೆ ತಿಳಿಸಿದರು.ಅವರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಭಾಂಗಣದಲ್ಲಿ ಕರೆಯಲಾಗಿದ್ದ ಯುಟಿಆರ್ಸಿ, ಬಾಲನ್ಯಾಯ ಕಾಯಿದೆ, ಮಾನವ ಕಳ್ಳಸಾಗಣೆ ತಡೆ, ಪೋಕ್ಸೋ ಕಾಯಿದೆ ಅನುಷ್ಠಾನ ಹಾಗೂ ವಿವಿಧ ಇಲಾಖೆಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯ ವಿವಾಹ; ಬಾಲ್ಯ ವಿವಾಹ ತಡೆಗಟ್ಟಲು ಇರುವ ಕಾನೂನು ಮತ್ತು ಇದರಿಂದ ಮಕ್ಕಳ ಮೇಲಾಗುವ ದೈಹಿಕ, ಸಾಮಾಜಿಕ, ಶೈಕ್ಷಣಿಕವಾಗಿ ಆಗುವ ತೊಂದರೆಗಳ ಬಗ್ಗೆ ತಿಳಿಸಬೇಕು. ಅಪ್ರಾಪ್ತ ವಯಸ್ಸಿನಲ್ಲಿ ವಿವಾಹವಾದರೆ ಮುಂದೆ ಆಗುವ ತೊಂದರೆಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಬಾಲ್ಯದಲ್ಲಿ ಮದುವೆಯಾಗುವ ಹುಡುಗಿಯರು ಸಾಮಾನ್ಯವಾಗಿ ಶಿಕ್ಷಣ ಮತ್ತು ಭವಿಷ್ಯದ ವೃತ್ತಿ ಅವಕಾಶಗಳ ಪ್ರವೇಶವನ್ನು ಹೊಂದಿರುವುದಿಲ್ಲ. ಆರಂಭಿಕ ಗರ್ಭಧಾರಣೆ ಮತ್ತು ಹೆರಿಗೆಯ ಪರಿಣಾಮವಾಗಿ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದು ಸಾಮಾನ್ಯವಾಗಿದೆ ಎಂದರು.
ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ 2024 ರ ಜನವರಿಯಿಂದ ಇಲ್ಲಿಯವರೆಗೆ ಬಾಲ್ಯ ವಿವಾಹ ತಡೆ ಬಗ್ಗೆ 25 ದೂರುಗಳು ಸ್ವೀಕೃತವಾಗಿದ್ದು 22 ಪ್ರಕರಣಗಳಲ್ಲಿ ಬಾಲ್ಯ ವಿವಾಹ ತಡೆಗಟ್ಟಲಾಗಿದೆ. ಮತ್ತು ಉಳಿದ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದಾಗ ತಡೆಯಲಾದ ಪ್ರಕರಣಗಳಲ್ಲಿ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಪುನರ್ವಸತಿ ಕಲ್ಪಿಸಬೇಕೆಂದು ತಿಳಿಸಿದ ಅವರು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಆರೋಗ್ಯ ತಪಾಸಣೆ ಮಾಡಿಸುವ ಮೂಲಕ ಪೌಷ್ಟಿಕ ಆಹಾರ ನೀಡಲು ಕ್ರಮ ವಹಿಸಬೇಕೆಂದರು.
ಪೋಕ್ಸೋ ಕಾಯಿದೆ; ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ಥರಾಗುವವರಿಗೆ ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಪುನರ್ವಸತಿ ಕಲ್ಪಿಸುವ ಕೆಲಸ ಮಾಡಬೇಕು. ಕಾಯಿದೆಯಡಿ ಪ್ರಕರಣ ದಾಖಲಿಸುವಾಗ ಸಂತ್ರಸ್ಥರು ಇದ್ದ ಕಡೆಯೇ ಹೋಗಿ ಮಾಹಿತಿ, ಹೇಳಿಕೆ ಪಡೆದುಕೊಂಡು ಬರಬೇಕು. ಆದರೆ ಅವರನ್ನು ನೀವಿರುವಲ್ಲಿಗೆ ಕರೆದುಕೊಂಡು ಬರಬಾರದು. ಆದರೆ ಇವರನ್ನು ಬಾಲಮಂದಿರದಲ್ಲಿ ಇಟ್ಟುಕೊಳ್ಳಬಾರದು ಎಂದರು.
ನಿರ್ಗತಿಕ ಕುಟೀರದ ಬದಲಾಗಿ ಬಾಲ ಮಂದಿರಕ್ಕೆ ದಾಖಲಿಸಿ; ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಖಾಸಗಿ ಅನುದಾನಿತ ಕುಟೀರಕ್ಕೆ ಸೇರಿಸುವ ಬದಲಾಗಿ ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ದಾಖಲು ಮಾಡುವ ಮೂಲಕ ಅವರ ಮುಂದಿನ ಭವಿಷ್ಯಕ್ಕೆ ಪೂರಕವಾದ ವಾತಾವರಣ ಕಲ್ಪಿಸಲು ಹಾಗೂ ಅವರು ಶೈಕ್ಷಣಿಕವಾಗಿ ಮುಂದುವರೆಯಲು ಶಾಲೆಗೆ ಪ್ರವೇಶ ಕಲ್ಪಿಸಬೇಕು ಎಂದ ಅವರು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ನಲ್ಲಿ ಊಟದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಲು ಸಮಾಜ ಕಲ್ಯಾಣಾಧಿಕಾರಿಗೆ ತಿಳಿಸಿದರು.