ಮಳವಳ್ಳಿ: ಹಣ, ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಜನತೆ ಈಗ ತಕ್ಕ ಉತ್ತರ ನೀಡಲು ಸಜ್ಜಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಳವಳ್ಳಿಯಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಎನ್ಡಿಎ ಅಭ್ಯರ್ಥಿ ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಜನಬಲದಿಂದ ಗೆಲ್ಲಲಿದ್ದಾರೆ. ಜನರ ಆಶೀರ್ವಾದ, ತಾಯಂದಿರ ಆಶೀರ್ವಾದದಿಂದ ಎನ್ಡಿಎ ಅಭ್ಯರ್ಥಿಗಳಿಗೆ ಗೆಲುವಾಗಲಿದೆ ಎಂದು ಇಲ್ಲಿ ಸೇರಿದ ಜನರು ಸಂದೇಶ ನೀಡಿದ್ದಾರೆ ಎಂದು ವಿಶ್ಲೇಷಿಸಿದರು.
ಲೋಕಸಭಾ ಚುನಾವಣೆಯಲ್ಲಿ ದೇಶದ ಸುರಕ್ಷತೆ, ಅಭಿವೃದ್ಧಿ ಕಾರ್ಯಕ್ಕಾಗಿ ಮೋದಿಜೀ ಮತ್ತೊಮ್ಮೆ ಎಂದು ದೇಶ- ರಾಜ್ಯದ ಜನರು ತೀರ್ಮಾನ ಮಾಡಿದ್ದಾರೆ ಎಂದು ಅವರು ತಿಳಿಸಿದರು. ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮಣ್ಣು ಹಾಕುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಅವರು ಟೀಕಿಸಿದರು.
ಪ್ರಧಾನಿ ಮೋದಿಜೀ ಅವರ ನೇತೃತ್ವದ ಎನ್ಡಿಎ ಕೂಟದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಆಗುತ್ತಿದೆ ಎಂದ ಅವರು, ಸಿದ್ದರಾಮಯ್ಯನವರು ಅಧಿಕಾರಕ್ಕೆ ಬರಲು ೧೦ ಕೆಜಿ ಅಕ್ಕಿ ಕೊಡುವುದಾಗಿ ಆಶ್ವಾಸನೆ ಕೊಟ್ಟಿದ್ದರು. ಆದರೆ, ಕೊಟ್ಟ ಮಾತನ್ನು ಈಡೇರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನರೇಂದ್ರ ಮೋದಿಯವರು ೫ ಕೆಜಿ ಅಕ್ಕಿಯನ್ನು ಬಡವರಿಗೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಅಕ್ಕಿ ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.