ಪಿರಿಯಾಪಟ್ಟಣ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಲೋಕಸಭಾ ಚುನಾವಣೆ ಅಂಗವಾಗಿ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಪಟ್ಟಣದಲ್ಲಿ ನಡೆದ ರೋಡ್ ಷೋ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲೆಲ್ಲ ಬರಗಾಲ ಬರುತ್ತಿದ್ದು ಕಳೆದ ಏಳು ತಿಂಗಳಿಂದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಹಣ ಹಾಕದೆ ಇರುವ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೆಟ್ ಸರ್ಕಾರ ಎಂದು ಟೀಕಿಸಿದರು.

ಮಹಿಳೆಯರಿಗೆ 2 ಸಾವಿರ ಹಣ ನೀಡುವ ನೆಪದಲ್ಲಿ ಮದ್ಯದ ಬೆಲೆ ಏರಿಕೆ ಮಾಡುವ ಮೂಲಕ ಪಿಕ್ ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ, ಜನವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸುವ ಸಲುವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ ಎಂದು ಕರೆ ನೀಡಿ ಯದುವೀರ್ ಅತ್ಯಂತ ಸಂಭಾವಿತ ವ್ಯಕ್ತಿಯಾಗಿದ್ದು ಮಾದರಿ ಸಂಸದರಾಗಿ ಕೆಲಸ ಮಾಡುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಮತಗಟ್ಟೆಯಲ್ಲಿ ನಮ್ಮ ಪಕ್ಷದ ಚಿಹ್ನೆ ಕಾಣುತ್ತಿಲ್ಲವೆಂದು ಜೆಡಿಎಸ್ ಕಾರ್ಯಕರ್ತರು ಗೊಂದಲಕ್ಕೀಡಾಗುವುದು ಬೇಡ ಕಮಲದ ಗುರುತಿಗೆ ಮತ ನೀಡಿ ಎಂದರು.
ಸಂಚಾರ ವ್ಯವಸ್ಥೆ ಅಸ್ತವ್ಯಸ್ತ
ಮೈಸೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧಗಂಟೆಗೆ ಹೆಚ್ಚು ಕಾಲ ಮುಖಂಡರು ಭಾಷಣ ಮಾಡುತ್ತಿದ್ದರಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡು ನೂರಾರು ವಾಹನಗಳು ಕಾದು ನಿಲ್ಲುವಂತಾಗಿತ್ತು, ರೋಡ್ ಷೋ ಮುಗಿದ ನಂತರ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಪೊಲೀಸರು ಹರಸಾಹಸಪಟ್ಟರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾತನಾಡಿ ದೇಶದ ರಕ್ಷಣೆ ಹಾಗೂ ಭದ್ರತೆಗಾಗಿ ಮತ್ತೊಮ್ಮೆ ಮೋದಿ ಪ್ರಧಾನ ಮಂತ್ರಿಯಾಗಬೇಕು ಅವರ ಕೈ ಬಲಪಡಿಸಲು ಯದುವೀರ್ ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ಶಾಸಕ ಜಿ.ಡಿ ಹರೀಶ್, ಮಾಜಿ ಶಾಸಕ ಕೆ.ಮಹದೇವ್, ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ, ಅಭ್ಯರ್ಥಿ ಯದುವೀರ್ ಒಡೆಯರ್ ಮಾತನಾಡಿದರು.
ಈ ಸಂದರ್ಭ ಮಾಜಿ ಸಚಿವ ರಾಮದಾಸ್, ಮಾಜಿ ಶಾಸಕ ಎಚ್.ಸಿ ಬಸವರಾಜು, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ.ರಾಜೇಂದ್ರ, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಮುಖಂಡರಾದ ಕೆ.ಎನ್ ಸೋಮಶೇಖರ್, ಆರ್.ಟಿ ಸತೀಶ್, ದೇವರಾಜ್ ಒಡೆಯರ್, ವಸಂತ್ ಕುಮಾರ್, ವಿಕ್ರಮ್ ರಾಜ್, ಅರುಣ್, ರವಿ, ನಳಿನಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.