ದಾವಣಗೆರೆ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಆರೋಪಿಸಿದರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಇಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏರ್ಪೋರ್ಟ್, ಪಾಸ್ಪೋರ್ಟ್ ಕಚೇರಿ ಯಾರ ಅಧೀನದಲ್ಲಿ ಕೆಲಸ ಮಾಡುತ್ತಿವೆ. ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗುತ್ತಿರುವ ಮಾಹಿತಿ ಕೇಂದ್ರ ಗುಪ್ತದಳಕ್ಕೆ ಇರಲಿಲ್ಲವೇ ದೇಶ ಬಿಟ್ಟು ಹೋಗದಂತೆ ಪ್ರಜ್ವಲ್ನನ್ನು ನೀವೇಕೆ ತಡೆಯಲಿಲ್ಲ” ಎಂದು ಪ್ರಶ್ನಿಸಿದರು.
ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋದ ತಕ್ಷಣ ಪ್ರಕರಣದಿಂದ ಬಿಟ್ಟು ಬಿಡಲು ಸಾಧ್ಯವಿಲ್ಲ. ಪ್ರಜ್ವಲ್ಗೆ ೪೧ಎ ಅಡಿ ನೋಟಿಸ್ ನೀಡಲಾಗಿದೆ. ವಿಚಾರಣೆಗಾಗಿ ಎಸ್ಐಟಿ ಮುಂದೆ ಹಾಜರಾಗಬೇಕು. ಆತನನ್ನು ವಿದೇಶದಿಂದ ಹೇಗೆ ಕರೆತರಬೇಕು ಎಂಬ ನಿಟ್ಟಿನಲ್ಲಿ ಎಸ್ಐಟಿ ಕೆಲಸ ಮಾಡುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದ ನೆರವು ಬೇಕಾಗುತ್ತದೆ ಎಂದು ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಕಾನೂನು ಸುವಸ್ಯಸ್ಥೆ ಹಾಳಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಮಾಹಿತಿ ಕೊರತೆ ಇದೆ. ತಮ್ಮ ಪಕ್ಷದ ರಾಜ್ಯ ಮುಖಂಡರಿಂದ ಮಾಹಿತಿ ತರಿಸಿಕೊಂಡು ಮಾತನಾಡಬೇಕಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಎಷ್ಟು ಕೊಲೆ ಸುಲಿಗೆ, ಅತ್ಯಾಚಾರ ಪ್ರಕರಣಗಳಾಗಿವೆ. ಡ್ರಗ್ಸ್ ದಂಧೆ ಯಾವ ಮಟ್ಟದಲ್ಲಿತ್ತು ಎಂಬುದನ್ನು ಅಂಕಿ-ಅಂಶ ಸಮೇತ ಸದನದಲ್ಲಿ ಉತ್ತರಿಸುತ್ತೇನೆ” ಎಂದು ಹೇಳಿದರು.
ಬಿಜೆಪಿ ಸರ್ಕಾರದ ಅವಧಿಗಿಂತಲೂ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರರನ್ನು ತ್ವರಿತಗತಿಯಲ್ಲಿ ಹಿಡಿಯುವಲ್ಲಿ ರಾಜ್ಯ ಪೊಲೀಸರ ಪಾತ್ರ ದೊಡ್ಡದಿದೆ. ಶಂಕಿತರು ಚೆನ್ನೈನಲ್ಲಿ ಟೋಪಿ ಖರೀದಿಸಿರುವ ಮಾಹಿತಿ ಸೇರಿದಂತೆ ಇನ್ನಿತರ ಮಾಹಿತಿಯನ್ನು ಕಲೆಹಾಕಿ, ಎನ್ಐಎ ಜೊತೆ ಹಂಚಿಕೊಳ್ಳಲಾಗಿತ್ತು. ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಜಂಟಿಯಾಗಿ ಆರೋಪಿಗಳನ್ನು ಹಿಡಿದಿದ್ದಾರೆ ಎಂದು ತಿಳಿಸಿದರು.